ರಾಜಕೀಯ

ಪ್ರಾಮಾಣಿಕ ನಾಯಕರ ಹಿತಾಸಕ್ತಿ ಕಾಪಾಡುವಲ್ಲಿ ಜೆಡಿಎಸ್ ವಿಫಲವಾಗಿದೆ: ಹೆಚ್.ಡಿ. ದೇವೇಗೌಡ

Manjula VN

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಪ್ರಾಮಾಣಿಕ ನಾಯಕರ ಹಿತಾಸಕ್ತಿ ಕಾಪಾಡುವಲ್ಲಿ ಜೆಡಿಎಸ್ ವಿಫಲವಾಗಿದ್ದು, ಈ ಕಾರಣವೇ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿತು ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. 

ಪಕ್ಷದ ಮುಖಂಡರಿಗೆ ಪತ್ರ ಬರೆದಿರುವ ಅವರು, ಕೊರೋನಾ ನಡುವೆಯೂ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಪಕ್ಷ ಸಂಘಟನೆಗೆ ಚುರುಕು ನೀಡಬೇಕು. ಸಮ್ಮಿಶ್ರ ಸರ್ಕಾರದಲ್ಲಿ ನಮ್ಮದೇ ಪಕ್ಷದ ಮುಖ್ಯಮಂತ್ರಿ ಇದ್ದರೂ ನಿಮ್ಮ ಹಿತ ರಕ್ಷಿಸುವಲ್ಲಿ ನಾವು ಎಡವಿದ್ದೇವೆ. ನಾವು ಈ ವಿಚಾರದಲ್ಲಿ ತಪ್ಪು ಮಾಡಿದ್ದೇವೆಂಬುದನ್ನು ಒಪ್ಪಿಕೊಳ್ಳುತ್ತೇನೆಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ. 

ವಿಧಾನಸಭೆ ಚುನಾವಣೆ ಮುಗಿದು ಎರಡೂವರೆ ವರ್ಷಗಳಾಗಿವೆ. ಇನ್ನೂ ಒಂದು ವರ್ಷದ ನಂತರ ಚುನಾವಣೆಯ ಬಿಸಿ ಆರಂಭವಾಗುತ್ತದೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಱರಾಗಿ ಪಕ್ಷ ನಿಷ್ಠರಾಗಿ ಇಷ್ಟು ವರ್ಷ ನಮ್ಮೊಂದಿಗೆ ಕೆಲಸ ಮಾಡುತ್ತಾ ಬಂದಿರುವ ನಿಮ್ಮ ಭವಿಷ್ಯ ಉಜ್ವಲವಾಗಿರಬೇಕು ಎಂಬುದು ನನ್ನ ಅಪೇಕ್ಷೆ, ನಿಮ್ಮ ಉತ್ಸಾಹ ಮತ್ತು ಸ್ಥೈರ್ಯ ಕಳೆದುಕೊಂಡಿರುವುದು ಪಕ್ಷಕ್ಕೆ ಅಷ್ಟರ ಮಟ್ಟಿಗೆ ದೊಡ್ಡ ಹಾನಿಯುಂಟು ಮಾಡಿದೆ. ಮಂಕಾಗಿರುವ ಮತ್ತು ನಿಸ್ತೇಜವಾಗಿರುವ ಪಕ್ಷವನ್ನು ಇನ್ನೂ ಒಂದು ವರ್ಷದ ಅವಧಿಯಲ್ಲಿ ಚುರುಕುಗೊಳಿಸಲೇಬೇಕಾಗಿದೆ. ಇದರ ಅನಿವಾರ್ಯತೆಯನ್ನು ಎಲ್ಲಾ ಅರ್ಥ ಮಾಡಿಕೊಳ್ಳುತ್ತೀರೆಂದು ನಂಬಿದ್ದೇನೆಂದು ತಿಳಿಸಿದ್ದಾರೆ. 

SCROLL FOR NEXT