ರಾಜಕೀಯ

ರಾಜ್ಯ ಕಾಂಗ್ರೆಸ್ ನಾಯಕರ ಭೇಟಿಯಾದ ಗುಲಾಂ ನಬಿ ಆಜಾದ್: ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚೆ

Manjula VN

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಅವರು ಶನಿವಾರ ನಗರಕ್ಕೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

ನಗರದಲ್ಲಿರುವ ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿರುವ ಗುಲಾಂ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. ಈ ಬೆಳವಣಿಗೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲವನ್ನು ಕೆರಳಿಸಿದೆ. 

ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಆಗಮಿಸಿದ ಗುಲಾಂ ನಬಿ ಆಜಾದ್ ಅವರು, ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಗುಲಾಂ ನಬಿ ಆಜಾದ್ ಅವರು ಪೂರ್ವನಿಗದಿತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು, ಹಾಗೆಯೇ ಉಭಯ ಕುಶಲೋಪರಿ ವಿಚಾರಿಸುವ ಸಲುವಾದಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

ಆದರೆ, ಕೆಪಿಸಿಸಿ ಅಧ್ಯಕ್ಷರ ನೇಮಕದ ಪ್ರಕ್ರಿಯೆ ನಡುವೆಯೇ ಹುದ್ದೆಯ ಪ್ರಬಲ ಆಕಾಂಕ್ಷಿಯೂ ಆಗಿರುವ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿರುವುದು ಕುತೂಹಲ ಕೆರಳಿಸಿದೆ. 

ಉಭಯ ನಾಯಕರು ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆಯೇ ಚರ್ಚಿಸಿದ್ದಾರೆಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿಯವರು ವಿದೇಶದಲ್ಲಿರುವುದರಿಂದ ಸದ್ಯಕ್ಕೆ ಈ ಹುದ್ದೆ ನೇಮಕ ಕುರಿತು ಕಾಂಗ್ರೆಸ್ ನಲ್ಲಿ ಯಾವುದೇ ನಿರ್ಧಾರ ಸಾಧ್ಯವಿಲ್ಲ. ರಾಹುಲ್ ಗಾಂಧಿ ದೇಶಕ್ಕೆ ಹಿಂತಿರುಗಿದ ಬಳಿಕ ಈ ದಿಸೆಯಲ್ಲಿ ಬೆಳವಣಿಗೆಗಳು ನಡೆಯಬಹುದು ಎನ್ನಲಾಗುತ್ತಿದೆ. 

SCROLL FOR NEXT