ರಾಜಕೀಯ

ಚುನಾವಣೆ ಮುಂದೂಡಿದರೆ ಕೋರ್ಟ್ ಗೆ ಮೊರೆ:ಹೆಚ್ ಕೆ ಪಾಟೀಲ್ ಎಚ್ಚರಿಕೆ

Sumana Upadhyaya

ಬೆಂಗಳೂರು: ಚುನಾವಣಾ ಆಯೋಗದ ನಡೆಗೆ ಕಾಂಗ್ರೆಸ್ ತೀವ್ರ ಅಸಮಾಧಾನಗೊಂಡಿದ್ದು ಕೋವಿಡ್ ನೆಪ ಹೇಳಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸರಿಯಲ್ಲ. ಜನಜೀವನ, ಚಟುವಟಿಕೆಗಳು ಹಿಂದಿನಂತೆಯೇ ಆರಂಭವಾಗಿದೆ. ಲಾಕ್ ಡೌನ್ ತೆರವುಗೊಳಿಸಲಾಗಿದೆ. ಹೀಗಾಗಿ ನೆಪವೊಡ್ಡಿ ಚುನಾವಣೆ ಮುಂದೂಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಚುನಾವಣೆ ನಡೆಸದೆ ನಾಮನಿರ್ದೇಶನ ಮಾಡಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ, ಪಂಚಾಯತ್ ರಾಜ್ ಅಧಿನಿಯಮದಲ್ಲೂ ಅವಕಾಶವಿಲ್ಲ. ಹೀಗಿದ್ದರೂ ಚುನಾವಣೆ ಮುಂದೂಡಲಾಗಿದೆ, ಇದು ಸಂವಿಧಾನ, ಕಾನೂನು‌ ಬಾಹಿರವಾದುದು, ಇದರ ವಿರುದ್ಧ ಕಾಂಗ್ರೆಸ್ ಕೋರ್ಟ್ ಮೆಟ್ಟಿಲೇರಲಿದೆ ಎಂದರು.

ಈ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಿಗದಿತ ಅವಧಿಗೆ ನಡೆಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆಮನವಿ ಮಾಡಿತ್ತು.

ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನಡೆಯಬೇಕಾದ ಚುನಾವಣಾ ಪ್ರಕ್ರಿಯೆಗೆ ಮೇಲಿನ ಮೇಲ್ವಿಚಾರಣೆ, ಮತದಾರರ ಪಟ್ಟಿ ತಯಾರಿಸುವಿಕೆ ಮತ್ತು ನಿಯಂತ್ರಣಗಳನ್ನು ರಾಜ್ಯ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಗೆ ನೀಡಲಾಗಿದೆ. ಸಂವಿಧಾನದ 243ಇ ವಿಧಿಯಂತೆ ಗ್ರಾಮ ಪಂಚಾಯತಿಯೊಂದು ಮೊದಲ ಸಭೆ ನಡೆಸಿದ ದಿನಾಂಕದಿಂದ ಐದು ವರ್ಷಗಳ ಅವಧಿಯವರೆಗೆ ಅಧಿಕಾರ ಹೊಂದಿದೆ.

ಅದರಂತೆ 2015 ನೇ ಇಸವಿಯಲ್ಲಿ ನಮ್ಮ ರಾಜ್ಯದ 6,024 ಗ್ರಾಮ ಪಂಚಾಯತಿಗಳ ಸದಸ್ಯರ ಸ್ಥಾನಗಳಿಗಾಗಿ ಚುನಾವಣೆಯು ನಡೆದಿದೆ. ಬಹುಪಾಲು ಗ್ರಾಮ ಪಂಚಾಯತಿಗಳ ಅಧಿಕಾರಾದ ಅವಧಿಯು ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ಮುಕ್ತಾಯವಾಗುತ್ತದೆ.

ಆದ್ದರಿಂದ ಸಂವಿಧಾನದ 73 ನೇ ತಿದ್ದುಪಡಿಯ ಉದ್ದೇಶಕ್ಕೆ ವಿರುದ್ಧವಾಗಿ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಗ್ರಾಮ ಪಂಚಾಯತಿಗಳಿಗೆ ನಿಗಧಿತ ಅವಧಿಯಲ್ಲಿ ಚುನಾವಣೆಗಳನ್ನು ನಡೆಸದೆ ಇರುವುದರಿಂದ ಗ್ರಾಮಗಳ ವಿಕೇಂದ್ರೀಕೃತ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆಯನ್ನು ದಮನ ಮಾಡಿದಂತಾಗುತ್ತದೆ. ಇದರಿಂದ ಸಂವಿಧಾನದ 73 ನೇ ತಿದ್ದುಪಡಿಯ ಧ್ಯೇಯೋದ್ದೇಶಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.

SCROLL FOR NEXT