ರಾಜಕೀಯ

ಡಿಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷ ಸೇರ್ಪಡೆ: ರಾಜರಾಜೇಶ್ವರಿ ನಗರ ಟಿಕೆಟ್ ಸಾಧ್ಯತೆ

Srinivasamurthy VN

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಅವರಿಗೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. 

ದಿವಂಗತ ಡಿ.ಕೆ.ರವಿ ಪತ್ನಿ ಹಾಗೂ ಹನುಮಂತರಾಯಪ್ಪನವರ ಮಗಳು ಕುಸುಮಾ ನಿನ್ನೆ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಭಾನುವಾರ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಗೆ ಕುಟುಂಬ ಸಮೇತವಾಗಿ ಆಗಮಿಸಿದ್ದ ಕುಸುಮಾ ಕಾಂಗ್ರೆಸ್​ ಸದಸ್ಯತ್ವವನ್ನು ಪಡೆದರು. ಕುಸುಮಾ ಅವರು ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್​ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ , ಮಾಜಿ ಡಿಸಿಎಂ ಪರಮೇಶ್ವರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಭಾಗಿಯಾಗಿದ್ದರು.

ಇದೇ ವೇಳೆ ಹನುಮಂತರಾಯಪ್ಪ ಹಾಗೂ ಅವರ ಬೆಂಬಲಿಗರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಜೊತೆಗೆ ಸಿರಾ ಕ್ಷೇತ್ರದ ಬೇರೆ ಪಕ್ಷದ ನೂರಾರು ಮುಖಂಡರೂ ಸಹ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಕುಸುಮಾ ಅವರಿಗೆ ರಾಜರಾಜೇಶ್ವರಿ ನಗರ ವಿಧಾನಸಭೆ  ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆ ಇದೆ. ಈ ಹಿಂದೆ ಈ ಕ್ಷೇತ್ರದಿಂದ ಮುನಿರತ್ನ ಅವರು ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದ್ದರು. ಆದರೆ ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಹಿಂದೆ ಇದೇ ಕ್ಷೇತ್ರದಿಂದ ಸುಮಾ ಅವರ ತಂದೆ ಹನುಮಂತರಾಯಪ್ಪ ಅವರೂ ಕೂಡ  ಟಿಕೆಟ್ ಬಯಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಇದೇ ಕ್ಷೇತ್ರದಿಂದ ಕುಸುಮಾ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. 

ಡಿಕೆ ರವಿ ಸಾವಿನ ವಿವಾದ ಕಳಚಿಕೊಳ್ಳಲು ಕಾಂಗ್ರೆಸ್ ಗೆ ಸಕಾಲ
ಇನ್ನು ಈ ಹಿಂದೆ ಐಎಎಸ್ ಅಧಿಕಾರಿ ಡಿಕೆ ರವಿ ಸಾವಿನ ಸಂದರ್ಭದಲ್ಲಿ ಅಂದರೆ 2015ರಲ್ಲಿ ಕಾಂಗ್ರೆಸ್ ಸರ್ಕಾರವಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆಗ ಸಂಭವಿಸಿದ್ದ ಡಿಕೆ ರವಿ ಸಾವು ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಇದೀಗ ರವಿ ಅವರ ಪತ್ನಿ ಕುಸುಮಾ ಅವರನ್ನು  ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಆ ವಿವಾದದಿಂದ ಹೊರಬರುವ ಪ್ರಯತ್ನ ಮಾಡುತ್ತಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ.

ನವೆಂಬರ್ 3ರಂದು ಉಪ ಚುನಾವಣೆ ಮತದಾನ ನಡೆಯಲಿದೆ.

SCROLL FOR NEXT