ಬೆಂಗಳೂರು: ಹಣಕಾಸು ಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶೀಘ್ರಗತಿಯಲ್ಲಿ ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ವಾಣಿಜ್ಯ ತೆರಿಗೆ, ಅಬಕಾರಿ, ಅಂಚೆಚೀಟಿ ಮತ್ತು ನೋಂದಣಿ ಮತ್ತು ಸಾರಿಗೆ ಇಲಾಖೆಗಳು ರಾಜ್ಯ ಖಜಾನೆಗೆ ಮುಖ್ಯ ಕೊಡುಗೆ ನೀಡುವ ಮೂಲಗಳಾಗಿದ್ದು, ಈ ಎಲ್ಲಾ ಕ್ಷೇತ್ರಗಳು ಮಂದಗತಿಯಲ್ಲಿ ಸಾಗುತ್ತಿವೆ. ರಾಷ್ಟ್ರದ ಜಿಡಿಸಿ ದರ ಶೇ.23ರಷ್ಟು ಕುಸಿದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಂದಗತಿಯ ಬೆಳವಣಿಗೆ ರಾಜ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ನಾವು ಪರಿಶೀಲಿಸಬೇಕು. ಪರಿಶೀಲನೆ ಬಳಿಕ ಆ ಸಮಸ್ಯೆಯನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಯಾವ ಕ್ಷೇತ್ರಗಳಲ್ಲಿ ಹಣ ದುರ್ಬಳಕೆಯಾಗುತ್ತಿದೆ ಎಂಬುದನ್ನು ಗುರ್ತಿಸಿ ಸರ್ಕಾರ ಅವುಗಳಿಗೆ ಕಡಿವಾಣ ಹಾಕುವ ಕ್ರಮ ಕೈಗೊಳ್ಳಬೇಕಿದೆ. ರಾಜ್ಯ ಸರ್ಕಾರ ಈಗಲಾದರು ಬುದ್ಧಿವಂತಿಕೆಯಿಂದ ಪರಿಸ್ಥಿತಿ ನಿಭಾಯಿಸದೇ ಹೋದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ. ಸರ್ಕಾರದ ಕೆಲವು ಬೇಜವಾಬ್ದಾರಿ ನಿರ್ಧಾರಗಳು ನಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ತೆಗೆದುಕೊಳ್ಳಬೇಕಾದ ನಿಲುವಿನ ಬಗ್ಗೆ ಚಿಂತನೆ ನಡೆಸುತ್ತೇವೆಂದು ತಿಳಿಸಿದ್ದಾರೆ.