ಸಿದ್ದರಾಮಯ್ಯ 
ರಾಜಕೀಯ

ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸಿ: ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಸವಾಲು

ಬಿ.ಎಸ್.ಯಡಿಯೂರಪ್ಪನವರು ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುತ್ತದೆ ಎಂಬ ಭರವಸೆ ಇದ್ದರೆ ಬಿ.ಎಸ್.ಯಡಿಯೂರಪ್ಪ  ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೋನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಮೀಲಾಗಿ ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ತರಾತುರಿಯಲ್ಲಿ ಹೊರಟಿದೆ. ಆದರೆ ಇಡೀ ದೇಶದ ರೈತರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಇಳಿದು ಭಾರತೀಯ ಜನತಾ ಪಕ್ಷದ ಹುನ್ನಾರವನ್ನು ವಿಫಲಗೊಳಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮಾತುಮಾತಿಗೆ ತಾನು ರೈತ ನಾಯಕನೆಂದು ಕರೆದುಕೊಳ್ಳುತ್ತಾರೆ. ಸಂಘ ಪರಿವಾರದ ಕೇಸರಿಶಾಲು ಕಿತ್ತುಹಾಕಿ ಹಸಿರು ಶಾಲು ಹೊದ್ದುಕೊಂಡು ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ರೈತ ವಿರೋಧಿ ಕೇಸರಿ ಶಾಲು ಹೊರಗೆ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪನವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದರು, ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದಾರೆ. ರೈತರ ಕಣ್ಣೀರ ಶಾಪ ಈ ಪಕ್ಷ ಮತ್ತು ಸರ್ಕಾರಕ್ಕೆ ತಟ್ಟದೆ ಇರದು ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಭಾರತೀಯ ಜನತಾ ಪಕ್ಷ ಹುಟ್ಟಿನಿಂದಲೇ ರೈತ ವಿರೋಧಿ. ಅದು ಬಂಡವಾಳಿಗರು, ಉದ್ಯಮಿಗಳು ಮತ್ತು ವರ್ತಕರ ಪಕ್ಷ. ಈ ಪಕ್ಷದ ಡಿಎನ್ ಎನಲ್ಲಿಯೇ ರೈತ ವಿರೋಧಿ ವಿಷ ಇದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾವೇರಿ-ಕೃಷ್ಣ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿತು, ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದೆ, ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳುಹೊಯ್ಕೊಳ್ಳುತ್ತಾ ಇದೆ. ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಎನ್ನುವ ಪ್ರಶ್ನೆಗೆ ರಾಜ್ಯದ ಜನತೆಗೆ ಈಗ ಉತ್ತರ ಸಿಕ್ಕಿದೆ. ಮುಖ್ಯಮಂತ್ರಿ

ಬಿ.ಎಸ್.ಯಡಿಯೂರಪ್ಪನವರು ಈಗ ರೈತ ಸಮುದಾಯದ ಎದುರು ನೀವು ಬೆತ್ತಲಾಗಿದ್ದಾರೆ, ಅವರು ಹೊದ್ದುಕೊಂಡಿರುವ ಯಾವ ಹಸಿರು ಶಾಲು ಕೂಡಾ ಅವರ ಮಾನ ಮುಚ್ಚಲಾರದು. ಯಡಿಯೂರಪ್ಪನವರು ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಬೇಕು ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ದೇಶವನ್ನು ಕಾರ್ಪೋರೇಟ್ ಕುಳಗಳು ಮತ್ತು ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿಯವರ ತಾಳಕ್ಕೆ ನೀವು ಕುಣಿಯತೊಡಗಿದರೆ ವರ್ತಮಾನ ಮಾತ್ರವಲ್ಲ ಇತಿಹಾಸ ಕೂಡಾ ಬಿ.ಎಸ್.ಯಡಿಯೂರಪ್ಪನವರನ್ನು ಕ್ಷಮಿಸಲಾರದು. ಈಗಲೂ ಕಾಲ ಮಿಂಚಿಲ್ಲ, ಯಡಿಯೂರಪ್ಪನವರು ಆತ್ಮಸಾಕ್ಷಿಗೆ ಕರೆಗೊಟ್ಟು ರೈತರ ಬೇಡಿಕೆ ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ