ದಾವಣಗೆರೆ: ನಾಯಕತ್ವ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಅಂತಿಮವಾಗಿದ್ದು, ನಿರ್ಧಾರಕ್ಕೆ ತಲೆಬಾಗುತ್ತೇನೆಂದು ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಭಾನುವಾರ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಅವಕಾಶ ನೀಡಿದರೆ, ಉತ್ತಮವಾಗಿ ಕೆಲಸ ಮಾಡುತ್ತೇನೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ನಾನು ಮತ್ತು ಎಲ್ಲಾ ಶಾಸಕರು ಪಾಲನೆ ಮಾಡುತ್ತೇವೆ. ಪ್ರಸ್ತುತ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ನಾಯಕರ ನಡುವೆ ಯಾವುದೇ ರೀತಿಯ ಮಾತುಕತೆಗಳೂ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗೆಂದು ನನಗೆ ಸಾಮರ್ಥ್ಯವಿಲ್ಲ ಎಂದಲ್ಲ. ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನಗೂ ಇದೆ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಮಾಡುತ್ತಾರೋ ಕಾದು ನೋಡೋಣ ಎಂದು ತಿಳಿಸಿದ್ದಾರೆ.
ಮೂರು ಬಾರೀ ಶಾಸಕನಾಗಿದ್ದೇನೆ ನನಗೆ ಕ್ಷೇತ್ರ ಜನರು ಮುಖ್ಯ, ಹಾಗಾಗಿ ನಾನು ದೆಹಲಿಯಿಂದ ನೇರವಾಗಿ ಕ್ಷೇತ್ರಕ್ಕೆ ಬಂದು ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ ಎಂದ ರೇಣುಕಾಚಾರ್ಯ, ನಿಗಮದ ಅಧ್ಯಕ್ಷನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ ಎಂದಿದ್ದಾರೆ.