ರಾಜಕೀಯ

ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆ

Nagaraja AB

ಹುಬ್ಬಳ್ಳಿ: ಜಾತ್ಯತೀತ ಜನತಾದಳ ಯುವ ಘಟಕದ ಮಾಜಿ ರಾಜ್ಯಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರನೂ ಆಗಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಜುಲೈ 30 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

ಜುಲೈ 30 ರಂದು ಶುಕ್ರವಾರ ಬೆಳಗ್ಗೆ 9 ಘಂಟೆಗೆ ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಶ್ರೀ ಸಿದ್ದರಾಮಯ್ಯ ಕೂಡ ಉಪಸ್ಥಿತರಿರಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಧು ಬಂಗಾರಪ್ಪ ಅವರ ಜತೆ ಇನ್ನೂ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಜೆಡಿಎಸ್ ಅಧ್ಯಕ್ಷರಾದ ಕಿರಣ್ ಹಿರೇಮಠ, ಭೈರಿದೇವರಕೊಪ್ಪ ಗ್ರಾಮದ ಹಿರಿಯರು ಹಾಗೂ ಪ್ರಭಾವಿ ಜೆಡಿಎಸ್ ಮುಖಂಡ ಬಸವರಾಜ್ ಮಾಯಕರ್ (ಬೆಲ್ಲದ) ಇವರ ನೇತೃತ್ವದಲ್ಲಿ ನೂರಾರು ಜಾತ್ಯತೀತ ಜನತಾದಳದ ಕಾರ್ಯಕರ್ತರೂ ಅದೇ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ ತಿಳಿಸಿದ್ದಾರೆ.

SCROLL FOR NEXT