ರಾಜಕೀಯ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೂಲಕ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕನಸು ನನಸಾಗುವುದೇ?

Shilpa D

ಹುಬ್ಬಳ್ಳಿ: ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಈ ಭಾಗದ ಹಲವು ವರ್ಷಗಳ ಅಭಿವೃದ್ಧಿ ಕನಸು ಚಿಗುರೊಡೆದಿದೆ. 

ಬಾಕಿ ಉಳಿದಿರುವ ಹಲವು ನೀರಾವರಿ ಯೋಜನೆಗಳು, ಕೃಷಿ ಮತ್ತು ಇನ್ನಿತರ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡುವ ಅಗತ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಬಸವರಾಜ ಬೊಮ್ಮಾಯಿ ಸಿಎಂ ಆಗಿರುವುದು ಜನರಲ್ಲಿ ಹೊಸ ಆಸೆ ಚಿಗುರೊಡೆಸಿದೆ.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬೇಡಿಕೆಗಳ ಬಗ್ಗೆ ಚೆನ್ನಾಗಿ ತಿಳಿದಿದೆ. ಹೀಗಾಗಿ ಅವರ ಅವಧಿಯಲ್ಲಿ ಮಹಾದಾಯಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್ ಆರ್ ಬೊಮ್ಮಾಯಿ ಅವರು ಕೂಡ ಸಿಎಂ ಆಗಿದ್ದವರು. ಹೀಗಾಗಿ ಈ ಭಾಗದಲ್ಲಿ ಉತ್ತಮ ಅಭಿವೃದ್ಧಿ ನಿರೀಕ್ಷೆಯಿದೆ ಎಂದು ಕೇಂದ್ರ ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ತಮ್ಮ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅಭಿವೃದ್ಧಿಯಲ್ಲಿ ರಾಜ್ಯ ಮತ್ತೊಂದು ಹಂತ ತಲುಪಲಿದೆ ಎಂದು ಜೋಶಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕದವರನ್ನು ಸಿಎಂ ಮಾಡುವ ಮೂಲಕ ಪಕ್ಷ ಉತ್ತಮ ನಿರ್ಧಾರ ಕೈಗೊಂಡಿದೆ. ಅವರೊಬ್ಬ ಬುದ್ಧಿವಂತ ರಾಜಕಾರಣಿ ಮತ್ತು ಸನ್ನಿವೇಶಗಳನ್ನು ಹೇಗೆ ನಿರ್ವಹಿಸಬೇಕು ಎಂಬ ಅರಿವಿದೆ ಎಂದು ಮಾಜಿ ಸಂಸದ ವಿಜಯ ಸಂಕೇಶ್ವರ್ ತಿಳಿಸಿದ್ದಾರೆ.

SCROLL FOR NEXT