ರಾಜಕೀಯ

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ

Manjula VN

ಬೆಂಗಳೂರು: ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

ಮುಖ್ಯಮಂತ್ರಿಗಳ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ರಾಜ್ಯದಲ್ಲಿ ಕೊರೋನಾ ನಿರ್ವಹಣೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ. ರಾಜ್ಯದಲ್ಲಿನ ಸ್ಥಿತಿಗತಿ, ಹೆಚ್ಚಾಗಿರುವ ಪ್ರಕರಣಗಳ ಕುರಿತು ಅಮಿತ್ ಶಾ ಆತಂಕ ವ್ಯಕ್ತಪಡಿಸಿದ್ದಾರೆಂದು ಹೇಳಿದ್ದಾರೆ. 

ಯಾವುದೇ ರಾಜಕೀಯ ಉದ್ದೇಶ ಭೇಟಿಯಾಗಿಲ್ಲ. ಕೊರೋನಾ ವೇಳೆಯಲ್ಲಿ ಬೇರೆ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಉದ್ದೇಶವಾಗಲಿ, ಆದ್ಯತೆಯಾಗಲೀ ಇಲ್ಲ. ಅದರ ಅಗತ್ಯವೂ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತ. ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಯೋಜನೆ ಮಾಡುವುದು ದೊಡ್ಡ ತಪ್ಪು ಎಂದು ತಿಳಿಸಿದ್ದಾರೆ. 

ಸೋಂಕು ನಿಯಂತ್ರಣ ಮಾಡಬೇಕಾದ ವೇಳೆಯಲ್ಲಿ ಇಂತಹ ಆಲೋಚನೆಗಳೇ ಬರಬಾರದು. ಇದೆಲ್ಲಾ ಹಸಿ ಸುಳ್ಳಾಗಿದ್ದು, ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದಾರೆ. 

SCROLL FOR NEXT