ರಾಜಕೀಯ

ಹಾನಗಲ್ ಉಪಚುನಾವಣೆಯಲ್ಲಿ ಗೆಲುವು: 2023ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಕಾಂಗ್ರೆಸ್!

Manjula VN

ಬೆಂಗಳೂರು: 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಉಪಚುನಾವಣೆ ನಡೆದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್‌ಗೆ ಹಾನಗಲ್‌ನಲ್ಲಿನ ಗೆಲುವು 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಭರವಸೆಯ ಕಿರಣವನ್ನು ಮೂಡಿಸಿದೆ.

ಸಿಂದಗಿಯಲ್ಲಿ ಸೋತರೂ ಕೂಡ 2018 ರ ಫಲಿತಾಂಶಗಳಿಗೆ ಹೋಲಿಸಿದರೆ ಅದರ ಮತಗಳ ಪ್ರಮಾಣ ಮೂರು ಪಟ್ಟು ಹೆಚ್ಚಾಗಿರುವುದು ಕಂಡು ಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ 21 ಉಪಚುನಾವಣೆಗಳಲ್ಲಿ ನಾಲ್ಕು ಕ್ಷೇತ್ರಗಳಲ್ಲಿ (ಶಿವಾಜಿನಗರ, ಹುಣಸೂರು, ಮಸ್ಕಿ ಮತ್ತು ಹಾನಗಲ್‌) ಮಾತ್ರ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಒಗ್ಗಟ್ಟಿನ ಪ್ರದರ್ಶನವು ಹಾನಗಲ್‌ನಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದರು. ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದು ಮತದಾರರಿಗೆ ಬಲವಾದ ಸಂದೇಶವನ್ನು ರವಾನಿಸಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸವನ್ನು ತುಂಬಲು ಸಹಾಯ ಮಾಡಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದರು.

ಈ ಹಿಂದೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಒಗ್ಗಟ್ಟಿನ ಕೊರತೆ ಮತ್ತು ಶೀತಲ ಸಮರ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿತ್ತು. ಆದರೆ, ಇಬ್ಬರು ನಾಯಕರ ಒಗ್ಗಟ್ಟು ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

2018 ರ ಚುನಾವಣೆಯಲ್ಲಿ ಹಾನಗಲ್ ಮತ್ತು ಸಿಂದಗಿ ಎರಡನ್ನೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಆದ್ದರಿಂದ ಒಂದು ಕ್ಷೇತ್ರದ ಗೆಲುವು ಇದೀಗ ಪಕ್ಷಕ್ಕೆ ದೊಡ್ಡ ಉತ್ತೇಜನವನ್ನು ನೀಡಿದೆ.

ಈ ಬಾರಿ ಕಾಂಗ್ರೆಸ್'ಗೆ ಬಂದಿರುವ ಮತಗಳೇ 2018ರಲ್ಲಿ ಹಾನಗಲ್‌ನಲ್ಲಿ ಬಿಜೆಪಿಗೆ ಬಂದಿತ್ತು. 2018ರಲ್ಲಿ 74,015 ಮತಗಳನ್ನು ಪಡೆದಿದ್ದ ಕಾಂಗ್ರೆಸ್‌, ಈ ಬಾರಿ 87,300 ಮತಗಳನ್ನು ಪಡೆದಿದೆ.

ಇನ್ನು ಸಿಂದಗಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ಪಕ್ಷದತ್ತ ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಇದು ಫಲಿತಾಂಶದ ಮೇಲೆ ಉತ್ತಮ ಪರಿಣಾಮ ಬೀರುವಂತೆ ಮಾಡಿದೆ. 2018ರಲ್ಲಿ 22,818 ಮತಗಳನ್ನು ಪಡೆದಿದ್ದ ಕಾಂಗ್ರೆಸ್'ಗೆ ಈ ಬಾರಿ 62,680 ಮತಗಳು ಬಂದಿವೆ.

ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಫಲಿತಾಂಶ ರಾಜ್ಯದಲ್ಲಿ ಬಿಜೆಪಿ ಅವನತಿಯ ಸಂಕೇತವಾಗಿದೆ. 2023ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

SCROLL FOR NEXT