ರಾಜಕೀಯ

ಸಿದ್ದರಾಮಯ್ಯ-ಡಿಕೆಶಿ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಳಂಬವಾಗಿದೆ: ಬಿ.ಎಸ್.ಯಡಿಯೂರಪ್ಪ

Manjula VN

ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧಅಯದ ಭಿನ್ನಾಭಿಪ್ರಾಯದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಳಂಬವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವಿದ್ದು,. ಪಕ್ಷದ ಪಟ್ಟಿಯನ್ನು ಅಂತಿಮಗೊಳಿಸಲು ಸಿದ್ದರಾಮಯ್ಯ ಅಸಮರ್ಥರಾಗಿದ್ದಾರೆಂದು ಟೀಕಾ ಪ್ರಹಾರ ನಡೆಸಿದರು.

ಇದೇ ವೇಳೆ ಬಿಜೆಪಿಯ ಜನಸ್ವರಾಜ್ ಯಾತ್ರೆಯನ್ನು ಜನ್ ಬರ್ಬಾದ್ ಯಾತ್ರೆ, ಟೂರಿಂಗ್ ಟಾಕೀಸ್ ಎಂದು ಟೀಕಿಸಿರುವ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನಸ್ವರಾಜ್ ಯಾತ್ರೆಯಲ್ಲಿ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ನಷ್ಟದ ಕುರಿತು ರೈತರು ಹಾಗೂ ಅಧಿಕಾರಿಗಳಿಂದ ವಿವರ ಸಂಗ್ರಹಿಸಲಾಗುತ್ತಿದೆ. ನಂತರ ಈ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲ್ಲಿಸಿ ರೈತರಿಗೆ ಪರಿಹಾರ ಸಿಗುವಂತೆ ಮಾಡಲಾಗುತ್ತದೆ. ತಮ್ಮ ಪಕ್ಷಕ್ಕೆ ಜನಬೆಂಬಲವಿಲ್ಲ ಎಂಬುದನ್ನು ಅರಿತ ಸಿದ್ದರಾಮಯ್ಯ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.

ಚುನಾವಣೆ ನಡೆಯಲಿರುವ 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕನಿಷ್ಠ 15 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಮಂಡ್ಯ ಮತ್ತು 2-3 ಕ್ಷೇತ್ರಗಳನ್ನು ಹೊರತುಪಡಿಸಿ ನಮ್ಮ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಆ ಸ್ಥಾನಗಳಲ್ಲೂ ಗೆಲ್ಲಲು ಶ್ರಮಿಸುತ್ತೇವೆಂದು ತಿಳಿಸಿದರು.

ಬಿಜೆಪಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ನಾನು ಅವರ ಜೊತೆಗೆ ಮಾತನಾಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಹಾಂತೇಶ ಕವಟಗಿಮಠ ಗೆಲ್ಲಿಸುತ್ತೇವೆಂದರು.

SCROLL FOR NEXT