ರಾಜಕೀಯ

ಉಪ ಚುನಾವಣೆ ಎಫೆಕ್ಟ್: ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸದ್ಯಕ್ಕಿಲ್ಲ!

Nagaraja AB

ಬೆಂಗಳೂರು: ಬಹುನಿರೀಕ್ಷಿತ ನಿಗಮ ಮಂಡಳಿ ಅಧ್ಯಕ್ಷರನ್ನು ಸದ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾಯಿಸುತ್ತಿಲ್ಲ. ಸದ್ಯ ರಾಜ್ಯದಲ್ಲಿ ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿರುವುದರಿಂದ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಯನ್ನು ಮುಂದಕ್ಕೆ ಹಾಕಲಾಗಿದೆ.

ರಾಜ್ಯ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾವಣೆ ಮಾಡಲು ಕಂದಾಯ ಸಚಿವ ಆರ್.ಅಶೋಕ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ  ನಿರ್ಮಲ ಕುಮಾರ್ ಸುರಾನ್ ಸೇರಿದಂತೆ ಮೂರು ಜನರ ಸಮಿತಿ ರಚನೆ ಮಾಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಸಮಿತಿಯ ಜವಾವ್ದಾರಿ ವಹಿಸಲಾಗಿದ್ದು, ಪಕ್ಷದ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾಣಾ ಅವರನ್ನು ಈ ಸಮಿತಿಗೆ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿಗಮ ಮಂಡಳಿ ಅಧ್ಯಕ್ಷರಾಗಿ ಒಂದೂವರೆ ವರ್ಷ ಪೂರೈಸಿದವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ಕಲ್ಪಿಸಲು ರಾಜ್ಯ ಬಿಜೆಪಿ ನಾಯಕರು ನಿರ್ಧರಿಸಿದ್ದರು. 2019 ರಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾದವರಲ್ಲಿ ಬಹುತೇಕರು ಯಡಿಯೂರಪ್ಪ ಅವರ ಆಪ್ತರೇ ಹೆಚ್ಚಾಗಿದ್ದಾರೆ. ಅಲ್ಲದೇ ಅವರೆಲ್ಲ ಒಂದೂವರೆ ವರ್ಷ ಅಧಿಕಾರ ಪೂರೈಸಿದ್ದರಿಂದ ಅವರನ್ನೆಲ್ಲ ಬದಲಾಯಿಸಿ ಪಕ್ಷಕ್ಕಾಗಿ ಕೆಲಸ ಮಾಡಿದ ಇನ್ನಷ್ಟು ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲು ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. 

ಪಕ್ಷದ ಕಾರ್ಯಕರ್ತರು ನಿಗಮ ಮಂಡಳಿ ಅಧ್ಯಕ್ಷರಾಗಿ ಒಂದೂವರೆ ವರ್ಷ ಪೂರೈಸಿದವರನ್ನು ಮಾತ್ರ ಬದಲಾವಣೆ ಮಾಡಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಕಾರ್ಯಕರ್ತರಾಗಿ ನಿಗಮ ಮಂಡಳಿ ಅಧ್ಯಕ್ಷರಾಗಿ ಒಂದೂವರೆ ವರ್ಷ ಪೂರೈಸದೇ ಇರುವವರನ್ನು ಮುಂದುವರೆಸಲು ನಿರ್ಧರಿಸಲಾಗಿದೆ. 

ಶಾಸಕರ ಬದಲಾವಣೆಗೆ ಮುಂದಾದರೆ ಈಗಾಗಲೇ ಸಂಪುಟದಲ್ಲಿ ಸ್ಥಾನ ಸಿಗದೇ ಮುನಿಸಿಕೊಂಡಿರುವ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದರೆ ಶಾಸಕರ ಆಕ್ರೋಶಕ್ಕೆ ಕಾರಣವಾಗಬಹುದು ಎನ್ನುವ ಕಾರಣಕ್ಕೆ ಅವರನ್ನು ಬದಲಾಯಿಸದಿರಲು ನಾಯಕರು ನಿರ್ಧರಿಸಿದ್ದಾರೆನ್ನಲಾಗಿದೆ.

SCROLL FOR NEXT