ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ ವರದಿಯನ್ನು ಕೇಳಿದೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ
ವರದಿಯನ್ನು ಕೇಳಿದೆ.

ಬಿಜೆಪಿ ಕೇಂದ್ರಿಯ ನಾಯಕರು ಮಂಗಳವಾರ ರಾತ್ರಿ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ಕುರಿತಂತೆ ಮಾತನಾಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯನ್ನು ತಮ್ಮ ನಾಯಕತ್ವದಲ್ಲಿಯೇ ಎದುರಿಸಲಿದ್ದು, ನಾಯಕತ್ವ ಬದಲಾವಣೆ ಇಲ್ಲ ಎಂದು ಅವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಇಂತಹ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ ಎನ್ನಲಾಗಿದೆ. 

ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ಕೆಲವು ಬಿಜೆಪಿ ಮುಖಂಡರ ಹೇಳಿಕೆಗಳು ಮತ್ತು ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಕರ್ನಾಟಕ ಭೇಟಿಯ ನಂತರ ಬಿಜೆಪಿ ಪಾಳಯದಲ್ಲಿನ ಮೌನದ ಬಗ್ಗೆ ಕಾಂಗ್ರೆಸ್ ರಾಜ್ಯ ಘಟಕದ ಸರಣಿ ಟ್ವೀಟ್‌ಗಳು ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾರಣವಾಗಿವೆ. ಅನೇಕ ಮಂತ್ರಿಗಳು ಮತ್ತು ಹಿರಿಯ ಬಿಜೆಪಿ ನಾಯಕರು ಇಂತಹ ವದಂತಿಗಳನ್ನು ತಳ್ಳಿ ಹಾಕಿದರು. ಕಾಂಗ್ರೆಸ್ ಅವುಗಳನ್ನು ಹರಡುತ್ತಿದೆ ಎಂದು ಆರೋಪಿಸಿದರು.

ಆಡಳಿತದತ್ತ ಗಮನ ಹರಿಸಿ, ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಮತ್ತು ಪಕ್ಷವನ್ನು ಬಲಪಡಿಸಲು ರಾಜ್ಯ ಪ್ರವಾಸವನ್ನು ಪ್ರಾರಂಭಿಸಬೇಕು ಎಂದು ಬಿಜೆಪಿ ಕೇಂದ್ರ ನಾಯಕರು ಸಿಎಂಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್-19 ದೃಢಪಟ್ಟ ನಂತರ ಕಳೆದ ಐದು ದಿನಗಳಿಂದ ಮನೆಯಲ್ಲೇ ಪ್ರತ್ಯೇಕವಾಗಿರುವ ಸಿಎಂ, ರಾಜ್ಯ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಮೊದಲ ಸುತ್ತಿನಲ್ಲಿ ಅವರು 60 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆ ಇದೆ. ಗುರುವಾರ ಸಿಎಂ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಯಾವುದೇ ನಾಯಕತ್ವ ಬದಲಾವಣೆಯನ್ನು ತಳ್ಳಿ ಹಾಕಿದ್ದಾರೆ. ಮತ್ತು ಅಂತಹ ಊಹಾಪೋಹಗಳನ್ನು ಹಬ್ಬಿಸುವವರಿಗೆ ಅದನ್ನು ತಡೆಯುವಂತೆ ಮನವಿ ಮಾಡಿದರು. ಬೊಮ್ಮಾಯಿ ಸಿಎಂ ಆಗಿ ಮುಂದುವರಿಯುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ನಳಿನ್‌ಕುಮಾರ್‌ ಕಟೀಲ್‌ ಅವರ ಅವಧಿ ಮುಗಿದ ಬಳಿಕ ಪಕ್ಷದ ಮುಂದಿನ ರಾಜ್ಯಾಧ್ಯಕ್ಷರನ್ನು ಪಕ್ಷದ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಯಡಿಯೂರಪ್ಪ ಹೇಳಿದರು. ನಾನು ಮತ್ತು ಇತರ ನಾಯಕರು ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿದರು.

ಇತ್ತೀಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ ಅಮಿತ್ ಶಾ ಅವರೊಂದಿಗೆ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ಯಡಿಯೂರಪ್ಪ ತಿಳಿಸಿದರು. ನಗರದ ತಮ್ಮ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಎಲ್ಲಾ ನಾಯಕರು ಬರುತ್ತಿದ್ದಾರೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT