ರಾಜಕೀಯ

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lingaraj Badiger

ಬಳ್ಳಾರಿ: ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು ಮತ್ತು ಸಿದ್ದರಾಮಯ್ಯ ಒಂದೇ ಎಂದು ಸಚಿವ ಬಿ. ಶ್ರೀರಾಮುಲು ಅವರು ಪ್ರತಿಪಕ್ಷ ನಾಯಕನನ್ನು ಹಾಡಿ ಹೊಗಳಿದ್ದಾರೆ.

ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋ ಆಸೆ ನನಗೂ ಇದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.

ನಾವು ರಾಜಕೀಯಗೋಸ್ಕರ ಮಾತನಾಡುತ್ತೇವೆ. ವೈಯಕ್ತಿಕವಾಗಿ ನನಗೂ ಸಿದ್ದರಾಮಯ್ಯ ಅವರಿಗೂ ಏನು ಇರೋದಿಲ್ಲ. ಶ್ರೀರಾಮುಲು ಕುರುಬ ಸಮುದಾಯ ಹಾಗೂ ಸಿದ್ದರಾಮಯ್ಯ ವಿರೋಧಿಯಲ್ಲ. ಅವಕಾಶ ಬಂದರೆ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ನನಗೂ ಇದೆ. ನಾನು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಸಿದ್ದರಾಮಯ್ಯ ಕೂಡಾ ಒಪ್ಪುತ್ತಾರೆ. ದೊಡ್ಡ ರಾಜಕೀಯ ವ್ಯವಸ್ಥೆಯಲ್ಲಿ ರಾಜಕೀಯ ತಂತ್ರಗಳನ್ನು ಮಾಡಲೇಬೇಕು. ಮುಂದೊಂದು ದಿನ ನಾನು ಹಾಗೂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಬರುತ್ತೇವೆ. ಹಿಂದುಳಿದ ಜಾತಿಗಳನ್ನು ಒಂದು ಮಾಡುವ ಪ್ರಯತ್ನವನ್ನು ನಾನು ಮತ್ತು ಸಿದ್ದರಾಮಯ್ಯ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. 

ಹಿಂದುಳಿದ ಸಮುದಾಯಗಳು ಒಂದಾದರೆ ರಾಜ್ಯ ಮತ್ತು ದೇಶದಲ್ಲಿ ಕ್ರಾಂತಿ ಮಾಡಬಹುದು. ನಮ್ಮಲ್ಲಿ ಒಗ್ಗಟ್ಟು ಪ್ರದರ್ಶನ ಆಗಬೇಕು. ಹಿಂದುಳಿದ ವಿಚಾರ ಬಂದಾಗ ನಾನು ಮತ್ತು ಸಿದ್ದರಾಮಯ್ಯ ಎಲ್ಲರೂ ಕೂಡ ಒಂದೇ ಎಂದು ಶ್ರೀರಾಮುಲು ಹೇಳಿದ್ದಾರೆ.

SCROLL FOR NEXT