ಬೆಂಗಳೂರು: ರಾಜ್ಯದಲ್ಲಿನ ಗಂಭೀರ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಮಹಾರಾಷ್ಟ್ರ ಗಡಿ ವಿವಾದವನ್ನು ದೊಡ್ಡ ವಿಷಯವನ್ನಾಗಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಗಡಿ ವಿವಾದ ಇತ್ಯರ್ಥವಾಗಿದ್ದು, ಮುಖ್ಯಮಂತ್ರಿ, ಸಚಿವರು, ಆಡಳಿತ ಪಕ್ಷದ ನಾಯಕರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಈ ಬಗ್ಗೆ ಮಾತನಾಡುತ್ತಲೇ ಇದ್ದಾರೆಂದು ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆ ಇಂದು ಬೆಳಗಾವಿಗೆ ತೆರಳಿದ ಸಿಎಂ ಬೊಮ್ಮಾಯಿ: ಹಲವು ಕಾಮಗಾರಿಗಳಿಗೆ ಚಾಲನೆ
ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ, ಮಹಾರಾಷ್ಟ್ರದ ಯಾವುದೇ ಪಕ್ಷದ ನಾಯಕರು ಗಡಿ ವಿವಾದವನ್ನು ಮುಂದಿಟ್ಟುಕೊಂಡು ಶಾಂತಿ ಕದಡುವುದು ಸರಿಯಲ್ಲ. ಬಿಜೆಪಿ ನಾಯಕರು ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.
ಗಡಿ ವಿಚಾರದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲದಿರುವುದರಿಂದ ರಾಜಕೀಯ ಮಾಡಲು ಪ್ರಯತ್ನಿಸಬಾರದು ಎಂದರು.
ಇದನ್ನೂ ಓದಿ: ಗಡಿ ವಿವಾದ ಕುರಿತು ರಾಜ್ಯದ ನಿಲುವು ಸ್ಪಷ್ಟ, ಸಾಂವಿಧಾನಿಕ ಮತ್ತು ಕಾನೂನು ಬದ್ಧವಾಗಿದೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿರುವ ಗ್ರಾಮಗಳು ರಾಜ್ಯದ ಭಾಗವಾಗಲಿದ್ದು, ಮಹಾರಾಷ್ಟ್ರದಲ್ಲಿರುವ ಗ್ರಾಮಗಳು ಆ ರಾಜ್ಯದಲ್ಲಿ ಇರುತ್ತವೆ. ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡುವ ಬದಲು ಜನರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಬಿಜೆಪಿ ನಾಯಕರು ಎಂದಿಗೂ ಸಿದ್ಧಾಂತದ ಬಗ್ಗೆ ಮಾತನಾಡುವುದಿಲ್ಲ, ಉದ್ಯೋಗ ನೀಡುತ್ತಿಲ್ಲ. ಜನರಿಗೆ ಸಹಾಯ ಮಾಡುತ್ತಿಲ್ಲ. ಈ ಕೆಲಸ ಮಾಡುವ ಬದಲು ಭಾವನಾತ್ಮಕ ವಿಷಯಗಳ ಬಗ್ಗೆ ಮಾತ್ರ ಮಾತನಾಡುತ್ತಾರೆಂದು ಕಿಡಿಕಾರಿದರು.