ರಾಜಕೀಯ

ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ: ಅನಾರೋಗ್ಯಗಳಿಗೆ ಚಿಕಿತ್ಸೆ ಪಡೆದು, ಫಿಟ್ ಆಗುತ್ತಿರುವ ರಾಜಕೀಯ ನಾಯಕರು!

Manjula VN

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ರಾಜ್ಯದ ಪ್ರಬಲ ಪಕ್ಷಗಳಾಗಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸಿದೆ. ಚುನಾವಣೆ ಹಾಗೂ ಪ್ರಚಾರ ವೇಳೆ ಯಾವುದೇ ರೀತಿಯ ಸಮಸ್ಯೆಗಳು ಬಾರದಂತೆ ಈಗಲೇ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಆರೋಗ್ಯ ತಪಾಸಣೆ ನಡೆಸಿಕೊಂಡು ಫಿಟ್ ಆಗುತ್ತಿದ್ದಾರೆ.

ಚುನಾವಣೆ ವೇಳೆ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಇದಕ್ಕೆ ರಾಜಕೀಯ ನಾಯಕರು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಈಗಲೇ ವೈದ್ಯರ ಭೇಟಿ ಮಾಡಿ, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ, ಶಸ್ತ್ರಚಿಕಿತ್ಸೆಗಳಿದ್ದರೆ, ಅವುಗಳನ್ನೂ ಈಗಲೇ ಮಾಡಿಸಿಕೊಂಡು ಫಿಟ್ ಆ್ಯಂಡ್ ಫೈನ್ ಆಗುತ್ತಿದ್ದಾರೆ.

ಕಳೆದ ಕೆಲವು ವಾರಗಳಿಂದ ಅನೇಕ ಶಾಸಕರು, ಸಂಸದರು ಮತ್ತು ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಕೆಲ ನಾಯಕರು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಆರೋಗ್ಯ ಸಮಸ್ಯೆಗಳನ್ನು ಮುಂದೂಡುತ್ತಿದ್ದ ಕೆಲವರು, ಚುನಾವಣೆ ಹಿನ್ನೆಲೆಯಲ್ಲಿ ಅಂತಿಮವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮುಂದಿನ ಕೆಲ ತಿಂಗಳುಗಳ ಕಾಲ ಯಾವುದೇ ಆರೋಗ್ಯ ಸಮಸ್ಯೆಗಳು ಬಾರದಂತೆ ಖಚಿತಪಡಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗಷ್ಟೇ ಸಚಿವರೊಬ್ಬರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಕಾರಣಾಂತರಗಳಿಂದ ಮುಂದೂಡಿದ್ದರು ಎಂದು ತಿಳಿದುಬಂದಿದೆ. ಇದೀಗ ಸಚಿವರು ವಿಶ್ರಾಂತಿ ಪಡೆಯುತ್ತಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. ಚುನಾವಣೆಗೆ ಕೆಲವು ತಿಂಗಳುಗಳಷ್ಟೇ ಬಾಕಿಯಿದ್ದು, ಡಿಸೆಂಬರ್ ತಿಂಗಳು ಚಿಕಿತ್ಸೆ ಪಡೆಯು ನಿರ್ಣಾಯಕ ತಿಂಗಳಾಗಿದೆ ಎಂದು ಹೇಳಲಾಗುತ್ತಿದೆ.

ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದು ಅಥವಾ ಚಿಕಿತ್ಸೆ ಪಡೆದುಕೊಳ್ಳುವುದು ವಿಳಂಬವಾದರೆ, ಅವರು ವಿಶ್ರಾಂತಿ ಪಡೆದುಕೊಳ್ಳಲು ಸಮಯ ಕಡಿಮೆಯಾಗುತ್ತದೆ. ಇದೀಗ ಕೇಂದ್ರ ನಾಯಕರ ಗಮನ ಗುಜರಾತ್ ಮೇಲಿದೆ. ಆದರೆ, ಶೀಘ್ರದಲ್ಲೇ ಕರ್ನಾಟಕದಕ್ಕ ಅವರ ಚಿತ್ತ ಹೊರಳಲಿದೆ ಎಂತು ಸಚಿವರ ಕಚೇರಿಯ ಮೂಲಗಳು ಮಾಹಿತಿ ನೀಡಿದೆ.

ಚುನಾವಣೆ ವೇಳೆ ಬಹುತೇಕ ಸಚಿವರು, ಪಕ್ಷದ ನಾಯಕರು ಚುನಾವಣಾ ರ್ಯಾಲಿ, ಮನೆ ಮನೆ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಹೀಗಾಗಿಯೇ ಹಲವು ನಾಯಕರು ಈಗಲೇ ಆರೋಗ್ಯದತ್ತ ಗಮನಹರಿಸಿ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಈ ನಡುವೆ ಸಚಿವ ಬಿ.ಸಿ.ಪಾಟೀಲ್ ಅವರು ಮೊಣಕಾಲು ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರ್, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮದೇ ಇತರೆ ಕಾಯಿಲೆಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವ ಎಸ್ ಅಂಗಾರ ಅವರು ಈ ವಾರದ ಆರಂಭದಲ್ಲಿ ಡೆಂಗ್ಯೂ ಜ್ವರಕ್ಕೆ ಒಳಗಾಗಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಮೊಣಕಾಲು ನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿದೆ.

ಮುಖ್ಯಮಂತ್ರಿಗಳು ಹೆಚ್ಚು ವಿಶ್ರಾಂತಿ ತೆಗೆದುಕೊಂಡಿಲ್ಲ, ಪ್ರಚಾರದ ತಿಂಗಳುಗಳಲ್ಲಿ ಕೆಲಸದ ಒತ್ತಡಗಳು ಭಾರೀ ಪ್ರಮಾಣದಲ್ಲಿರುತ್ತವೆ. “ನವೆಂಬರ್‌ನಲ್ಲಿ ಸಿಎಂ ಬೊಮ್ಮಾಯಿ ಬಹುತೇಕ ಜಿಲ್ಲೆಗಳಿಗೆ ಭೇಟಿ ನೀಡಿದ್ದರು ಮತ್ತು ದೆಹಲಿಗೆ ಭೇಟಿ ನೀಡಿದ್ದರು. ಮುಖ್ಯಮಂತ್ರಿಗಳು ಮೊಣಕಾಲು ನೋವಿಗೆ ಆಯುರ್ವೇದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚುನಾವಣೆ ಮುಗಿಯುವವರೆಗೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಂದು ಮೂಲಗಳು ತಿಳಿಸಿವೆ.

SCROLL FOR NEXT