ಬೆಂಗಳೂರು: ಸಂಸತ್ತಿನಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಖಾಸಗಿ ಮಸೂದೆಯ ಮೇಲೆ ಚರ್ಚೆಯಾಗುತ್ತಿದ್ದು, ಹಲವಾರು ಬಿಜೆಪಿ ಆಡಳಿತವಿರುವ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಗಳನ್ನು ಇಡುತ್ತಿವೆ.
ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಕೂಡ ರಾಜಕೀಯ ಲಾಭಕ್ಕಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು 'ಬ್ರಹ್ಮಾಸ್ತ್ರ'ವಾಗಿ ಬಳಸಿಕೊಳ್ಳಲು ಸಿದ್ಧವಾಗಿದೆ.
ಇದನ್ನು ಓದಿ: ಸಿದ್ದರಾಮಯ್ಯಗೆ ಟಿಪ್ಪು ಐಕಾನ್, ಹಾಗೆಯೇ ಡಿಕೆ ಶಿವಕುಮಾರ್ ಒಬ್ಬ ಐಕಾನ್ನನ್ನು ಹುಡುಕಿಕೊಂಡಿದ್ದಾರೆ: ಬಿಜೆಪಿ
ಭ್ರಷ್ಟಾಚಾರ ಆರೋಪಗಳು ಮತ್ತು ಬೆಂಗಳೂರಿನಲ್ಲಿ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಹೋರಾಡಲು ಬೊಮ್ಮಾಯಿ ಸರ್ಕಾರ ಹಿಂದುತ್ವ ಕಾರ್ಡ್ ಅನ್ನು ಬಳಸುತ್ತಿದೆ.
ದಕ್ಷಿಣ ಭಾರತದಲ್ಲಿ ಪ್ರಮುಖ ಆರ್ಥಿಕ ಶಕ್ತಿಯಾಗಿರುವ ಕರ್ನಾಟಕವು ದೇಶದ ಎರಡೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಈ ವಿಧಾನಸಭೆ ಚುನಾವಣೆ ನಿರ್ಣಾಯಕವಾಗಿದೆ. ಆಡಳಿತರೂಢ ಬಿಜೆಪಿ ತನ್ನ ಆಕ್ರಮಣಕಾರಿ ಹಿಂದುತ್ವದ ನಿಲುವಿನ ಭಾಗವಾಗಿ, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತಂದಿದೆ. ಈಗ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಬಿಜೆಪಿಯ ಬತ್ತಳಿಕೆಯಲ್ಲಿದ್ದು, ಅದನ್ನು ಮುಂದಿನ ಚುನಾವಣೆಯಲ್ಲಿ ಬಳಸಿಕೊಳ್ಳಲು ಸಿದ್ಧವಾಗಿದೆ.
ಕಳೆದ ನವೆಂಬರ್ ಅಂತ್ಯದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರ, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಬಗ್ಗೆ "ಗಂಭೀರ" ಚಿಂತನೆ ಮಾಡುತ್ತಿದೆ ಎಂದು ಹೇಳಿದ್ದರು.
ಬಿಜೆಪಿ ಇತ್ತೀಚಿಗೆ ಮುಕ್ತಾಯಗೊಂಡ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಭರವಸೆ ನೀಡುವ ಸಾಧ್ಯತೆ ಇದೆ.