ಜನೋತ್ಸವ ಕಾರ್ಯಕ್ರಮ 
ರಾಜಕೀಯ

ಪ್ರವೀಣ್ ನೆಟ್ಟಾರು ಹತ್ಯೆಗೆ ವ್ಯಾಪಕ ಆಕ್ರೋಶ: ನಡ್ಡಾ ಮಧ್ಯಪ್ರವೇಶದ ನಂತರ 'ಜನೋತ್ಸವ' ರದ್ಧುಗೊಳಿಸಿದ ಬೊಮ್ಮಾಯಿ!

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಗುರುವಾರ ನಿಗದಿಯಾಗಿದ್ದ  ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಲಾಯಿತು.

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಗುರುವಾರ ನಿಗದಿಯಾಗಿದ್ದ  ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಲಾಯಿತು.

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾರ್ಯಕ್ರಮ ಮುಂದುವರಿಸದಂತೆ ಬೊಮ್ಮಾಯಿ ಅವರಿಗೆ ಸಲಹೆ ನೀಡಿದರು. ನಂತರ ಮುಖ್ಯಮಂತ್ರಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳಾದ ಡಾ.ಕೆ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಅವರೊಂದಿಗೆ ಚರ್ಚಿಸಿದರು.

ಈ ಚರ್ಚೆಗಳ ನಂತರ ಬೊಮ್ಮಾಯಿ ಬುಧವಾರ ಮಧ್ಯರಾತ್ರಿ ತಮ್ಮ ನಿವಾಸದಲ್ಲಿ ತರಾತುರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿರುವುದಾಗಿ ಘೋಷಿಸಿದರು.  ಹಳೆ ಮೈಸೂರು ಭಾಗದಲ್ಲಿ ಪಕ್ಷದ ತಳಹದಿಯನ್ನು ಬಲಪಡಿಸುವ ಉದ್ದೇಶದಿಂದ ರ್ಯಾಲಿಯನ್ನು ಆಯೋಜಿಸಲಾಗಿದ್ದರೂ, ಬಿಜೆಪಿ ಕಾರ್ಯಕರ್ತರು ಅದನ್ನು ರಕ್ಷಿಸಲು ವಿಫಲವಾದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವಾಗ ಅದನ್ನು ಮುಂದುವರಿಸುವುದು ಜಾಣತನವಲ್ಲ ಎಂದು ಬಿಜೆಪಿ ಚಿಂತಕರ ಚಾವಡಿ ಅಭಿಪ್ರಾಯಪಟ್ಟಿದೆ.

ಆದರೆ ಪಕ್ಷದ ಕಾರ್ಯಕರ್ತನ ಹತ್ಯೆಯಾದ ಸಂದರ್ಭದಲ್ಲಿ ರ್ಯಾಲಿ ನಡೆಸಲು ನನ್ನ ಆತ್ಮಸಾಕ್ಷಿ ಒಪ್ಪಲಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಜನರನ್ನು ಸಜ್ಜುಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ ಸಚಿವರಾದ ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಹಿನ್ನಡೆಯಾಗಿದೆ. ಮಧ್ಯರಾತ್ರಿಯಲ್ಲಿ ನಿರ್ಧಾರ ಬಂದಿದ್ದರಿಂದ, ಆಗಲೇ 20,000 ಜನರಿಗೆ ಆಹಾರವನ್ನು ಸಿದ್ಧಪಡಿಸಲಾಗಿತ್ತು. ಸ್ಥಳದ ಸುತ್ತಮುತ್ತಲಿನ ಶಾಲೆಗಳು, ಹಾಸ್ಟೆಲ್‌ಗಳು ಮತ್ತು ಅನಾಥಾಶ್ರಮಗಳಿಗೆ ಪುಲಾವ್ ಮತ್ತು ಸಿಹಿತಿಂಡಿಗಳನ್ನು ವಿತರಿಸಲಾಯಿತು ಎಂದು ಬಿಜೆಪಿ ಮುಖಂಡ ದೀರಜ್ ಮುನಿರಾಜು ಹೇಳಿದ್ದಾರೆ.

ಸರ್ಕಾರವು ವಾಸ್ತವವಾಗಿ ಇದೇ ರೀತಿಯ ಕಾರ್ಯಕ್ರಮ ಮತ್ತು ರಾಜ್ಯಾದ್ಯಂತ ಸರಣಿ ರ್ಯಾಲಿಗಳನ್ನು ಆಯೋಜಿಸಲು ಪ್ಲಾನ್ ಮಾಡಿತ್ತು, ಇವೆಲ್ಲವೂ ಇತ್ತೀಚೆಗೆ ನಡೆದ ಘಟನೆಯಿಂದ ವಿಳಂಬವಾಗಬಹುದು. ಎಲ್ಲವೂ ಸರಿಯಾಗಿ ನಡೆದಿದ್ದರೆ, ಬಹುಕಾಲದಿಂದ ನಡೆಯಬೇಕಾಗಿದ್ದ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಬೊಮ್ಮಾಯಿ ನಡ್ಡಾ ಜತೆ ಸಮಾಲೋಚನೆ ನಡೆಸುತ್ತಿದ್ದರು.  ಮೂಲಗಳ ಪ್ರಕಾರ ಬೊಮ್ಮಾಯಿ ಅವರು ಜಿಎಸ್‌ಟಿ ದರ ಕುರಿತು ಸಚಿವರ ಸಭೆಗಾಗಿ ಆಗಸ್ಟ್ 7 ರಂದು ನವದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಆ ವೇಳೆ ನಡ್ಡಾ ಜೊತೆ ಸಂಪುಟ ವಿಸ್ತರಣೆ  ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT