ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

“ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‌ಐಎ ತನಿಖೆಗೆ ವಹಿಸಲಿ”: ಎಚ್ ಡಿ ಕುಮಾರಸ್ವಾಮಿ

ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ.

ಬೆಂಗಳೂರು: ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್ಐಎ ತನಿಖೆಗೆ ವಹಿಸಲು ಸರ್ಕಾರ ಹಿಂಜರಿಯುತ್ತಿದೆ! ಏಕೆ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ!! ಎಂದು ಟೀಕಿಸಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ “ಶಾಂತಿ ಕಾಪಾಡಿ” ಎನ್ನುವ ಮಾತು ಬಂತಾ? ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು ಎಂದು ಕಿಡಿಕಾರಿದ್ದಾರೆ.

ಎನ್ಐಎ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. ಎನ್ಐಎಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ!! ಇದಲ್ಲವೇ ವಿಪರ್ಯಾಸ!! ಎಂದು ವ್ಯಂಗ್ಯವಾಡಿದ್ದಾರೆ.

ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ.. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ತುಂಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ!! ಎಂದು ಎಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಎಚ್‌ಡಿಕೆ  ಗುಡುಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT