ಎಚ್ ಡಿ ರೇವಣ್ಣ 
ರಾಜಕೀಯ

ಕೆಡಿಪಿ ಸಭೆಯಲ್ಲೇ ಎಚ್‌ಡಿ ರೇವಣ್ಣ - ಪ್ರೀತಂ ಗೌಡ ನಡುವೆ ಜಟಾಪಟಿ

ಕೊನೆಗೂ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹಾಗೂ ಹಾಸನ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ನಡುವಿನ ಶೀತಲ ಸಮರ ಬುಧವಾರ ಸ್ಫೋಟಗೊಂಡಿದೆ.

ಹಾಸನ: ಕೊನೆಗೂ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹಾಗೂ ಹಾಸನ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ನಡುವಿನ ಶೀತಲ ಸಮರ ಬುಧವಾರ ಸ್ಫೋಟಗೊಂಡಿದೆ.

ಇಂದು ನಡೆದ ಕೆಡಿಪಿ ಸಭೆಯಲ್ಲಿ ಹಾಸನದ ಹೊಸ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಚನ್ನಪಟ್ಟಣ ಟ್ಯಾಂಕ್‌ ಅಭಿವೃದ್ಧಿ ವಿಚಾರವಾಗಿ ಎಚ್‌ಡಿ ರೇವಣ್ಣ ಹಾಗೂ ಬಿಜೆಪಿ ಶಾಸಕ ಪ್ರೀತಂ ಗೌಡ ನಡುವೆ ತೀವ್ರ ಜಟಾಪಟಿ ನಡೆಯಿತು.

ಅಚ್ಚರಿ ಎಂದರೆ, ಈ ವೇಳೆ ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌ಕೆ ಕುಮಾರಸ್ವಾಮಿ, ಶಾಸಕರಾದ ಕೆಎಸ್ ಲಿಂಗೇಶ್ ಮತ್ತು ಕೆಎಂ ಶಿವಲಿಂಗೇಗೌಡ ಅವರು ಎಚ್‌ಡಿ ರೇವಣ್ಣ ಅವರನ್ನು ಬೆಂಬಲಿಸಲಿಲ್ಲ.

ಸುಮಾರು ಹದಿನೈದು ನಿಮಿಷಗಳ ಕಾಲ ನಾಯಕರ ನಡುವೆ ಮಾತಿನ ಚಕಮಕಿ ಮುಂದುವರಿಯಿತು. ಉಭಯ ನಾಯಕರು ಏಕವಚನದಲ್ಲೇ ವಾಗ್ವಾದ ನಡೆಸಿದರು. ಮೊದಲಿಗೆ ಎಚ್.ಡಿ.ರೇವಣ್ಣ ಅವರು ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ ಅಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 144 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಆದರೆ ಚನ್ನಪಟ್ಟಣ ಕೆರೆ ಅಭಿವೃದ್ಧಿಯ ಮೂಲ ಯೋಜನೆಯನ್ನು ಬದಲಿಸಿದ ಬಿಜೆಪಿ ಸರ್ಕಾರದ ನಿರ್ಧಾರವನ್ನು ಟೀಕಿಸಿದರು.

ಪ್ರೀತಂ ಗೌಡ ಮಾತನಾಡಿ, ಕೆಡಿಪಿ ಸಭೆಯಲ್ಲಿ ಸಚಿವ ಸಂಪುಟದ ನಿರ್ಣಯವನ್ನು ಪ್ರಶ್ನಿಸುವುದು ಸರಿಯಲ್ಲ ಎಂದರು. ಆದರೆ ಚನ್ನಪಟ್ಟಣ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಸಂಪುಟ ನಿರ್ಣಯ ವಿರೋಧಿಸಿ ನಿರ್ಣಯ ಅಂಗೀಕರಿಸುವಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರಿಗೆ ಎಚ್.ಡಿ.ರೇವಣ್ಣ ಒತ್ತಾಯಿಸಿದರು. ಅಲ್ಲದೆ ಹಾಸನ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕೊಡುಗೆ ಏನು? ಎಂದು ಎಚ್‌ಡಿ ರೇವಣ್ಣ ಪ್ರಶ್ನಿಸಿದಾಗ ಪರಿಸ್ಥಿತಿ ಹದಗೆಟ್ಟಿತು.

ಈ ವೇಳೆ ಹಲವು ವರ್ಷಗಳಿಂದ ಸಚಿವ, ಮುಖ್ಯಮಂತ್ರಿ ಹಾಗೂ ಪ್ರಧಾನಿ ಹುದ್ದೆ ಅನುಭವಿಸುತ್ತಿದ್ದರೂ ಜಿಲ್ಲೆಯ ಅಭಿವೃದ್ಧಿ ಮಾಡುವಲ್ಲಿ ಜೆಡಿಎಸ್ ನಾಯಕರು ವಿಫಲರಾಗಿದ್ದಾರೆ ಎಂದು ಪ್ರೀತಂ ಗೌಡ ಆಕ್ರೋಶ ವ್ಯಕ್ತಪಡಿಸಿದರು. 

ತಾವು ಪ್ರತಿನಿಧಿಸುವ ಹಾಸನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಆಗಾಗ್ಗೆ ಅಡ್ಡಿಪಡಿಸುವ ಬದಲು ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಎಚ್‌ಡಿ ರೇವಣ್ಣ ಅವರಿಗೆ ಪ್ರೀತಂ ಗೌಡ ಸವಾಲು ಹಾಕಿದರು. ಈ ಕುರಿತು ಪ್ರತ್ಯೇಕವಾಗಿ ಚರ್ಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಆಗಾಗ್ಗೆ ಹೇಳುತ್ತಿದ್ದರೂ ಮುಖಂಡರು ಮಾತ್ರ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT