ರಾಜಕೀಯ

ಬಿಎಸ್ ವೈ ಆಪ್ತ, ಮಾಜಿ ಶಾಸಕ ಯು.ಬಿ. ಬಣಕಾರ್ ಬಿಜೆಪಿಗೆ ರಾಜೀನಾಮೆ

Lingaraj Badiger

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಹಿರೇಕೆರೂರು ಮಾಜಿ ಶಾಸಕ ಬಣಕಾರ್ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಮತ್ತು ರಾಜ್ಯ ಉಗ್ರಾಣ ನಿಮಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬಣಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಣಕಾರ್ ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ಆದರೆ, ಇದೀಗ ಬಣಕರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಹಿರೇಕೆರೂರು ಕ್ಷೇತ್ರದ ಎರಡು ಬಾರಿ ಶಾಸಕರಾಗಿದ್ದ ಯು.ಬಿ.ಬಣಕಾರ್​ ಅವರು​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲು ಅನುಭವಿಸಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

SCROLL FOR NEXT