ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಸೋಮವಾರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಕೆಪಿಸಿಸಿ ನಿಗದಿಪಡಿಸಿದ್ದ ಗಡುವು ಸೋಮವಾರ ಕೊನೆಗೊಂಡಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಅವರ ಆಪ್ತರು ಅರ್ಜಿ ಸಲ್ಲಿಸಿದರು. ಆದರೆ, ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಅರ್ಜಿಯಲ್ಲಿ ಇಲ್ಲ.
ವರುಣಾ ಕ್ಷೇತ್ರದ ಶಾಸಕರಾಗಿರುವ ಅವರ ಪುತ್ರ ಡಾ.ಯತೀಂದ್ರ ಅವರು ಕಳೆದೆರಡು ದಿನಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ದರಿಂದ ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಸಸ್ಪೆನ್ಸ್ ಮುಂದುವರಿದಿತ್ತು. ಇತ್ತೀಚೆಗಷ್ಟೇ ಅವರು ಬಾದಾಮಿಯಿಂದ ಸ್ಪರ್ಧಿಸುವುದನ್ನು ತಳ್ಳಿ ಹಾಕಿದ್ದರು.
2018ರ ಚಾಮುಂಡೇಶ್ವರಿಯಿಂದ ಸೋಲಿನ ನಂತರ ಹಳೇ ಮೈಸೂರು ಭಾಗಕ್ಕೆ ಮರಳಲು ಬಯಸಿರುವ ಸಿದ್ದರಾಮಯ್ಯ, ಅವರನ್ನು ಸೋಲಿಸಲೇಬೇಕು ಎಂದು ವಿರೋಧಿಗಳು ಹಠ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಪಸಂಖ್ಯಾತ ಮತ್ತು ಕುರುಬ ಮತದಾರರನ್ನು ಹೊಂದಿರುವ 'ಸುರಕ್ಷಿತ ಸ್ಥಾನ'ದತ್ತ ಸಿದ್ದರಾಮಯ್ಯ ಕಣ್ಣಿದೆ, ಅದರಲ್ಲಿ ಕೋಲಾರವೂ ಒಂದಾಗಿದೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ!
ತಮ್ಮ ತವರು ಜಿಲ್ಲೆ ಮೈಸೂರಿನ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕಿಳಿಯುವುದು ಖಚಿತ ಎಂದು ಮೂಲಗಳು ತಿಳಿಸಿವೆ, ಇದರ ಬದಲಿಯಾಗಿ ಡಾ. ಯತೀಂದ್ರ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿಮೈಸೂರಿನಿಂಗ ಕಣಕ್ಕಿಳಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಮೈಸೂರು ತಮ್ಮ ತವರು ಜಿಲ್ಲೆಯಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವರಣಾದಿಂದ ಸ್ಪರ್ದಿಸುವ ಸಾಧ್ಯತೆಯಿಲ್ಲ, ಹೀಗಾಗಿ ಸಿದ್ದರಾಮಯ್ಯ ವರುಣಾ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಮತವಾಗಿದೆ.