ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯ ಭದ್ರತೆ ಕುರಿತು ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಿನ್ನೆ ಧಾರಾಕಾರ ಮಳೆಯಿಂದ ರಾಹುಲ್ ಗಾಂಧಿ ಅವರು ಅರ್ಧಗಂಟೆ ಕಾಲ ಸಂಚಾರಿ ದಟ್ಟಣೆಯಲ್ಲಿ ಸಿಲುಕಿದ್ದರು. ಇದಕ್ಕೆ ಯಾರು ಹೊಣೆ? ಅವರಿಗೆ ಭದ್ರತೆ ನೀಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲವೇ? ಅದರಲ್ಲೂ 40% ಕಮಿಷನ್ ಬಯಸುತ್ತಿದ್ದೀರಾ? ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ದೇಶದಲ್ಲಿನ ಬಡತನ, ಆರ್ಥಿಕ ಅಸಮಾನತೆಯಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಮಾಜಿಕ ಅಸಮಾನತೆಯಿಂದಾಗಿ ಸರ್ವರಿಗೂ ಸಮಬಾಳು ಸಿಗುತ್ತಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗವಿರಲಿ, 40 ವರ್ಷಗಳಲ್ಲೇ ಅತಿ ಹೆಚ್ಚಿನ ನಿರುದ್ಯೋಗ ಸೃಷ್ಟಿಯಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಭಾರತ್ ಜೋಡೋ ಯಾತ್ರೆಯ ಉದ್ದೇಶ ಎಂದು ಅವರು ತಿಳಿಸಿದ್ದಾರೆ.