ಹೊಸಪೇಟೆ/ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಪ್ರಬಲ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಬುಧವಾರ ಹೊಸಪೇಟೆ ಸಮೀಪದ ಕಮಲಾಪುರ ಗ್ರಾಮದ ದಲಿತ ವ್ಯಕ್ತಿಯೊಬ್ಬರ ಮನೆಯಲ್ಲಿ ಉಪಹಾರ ಸೇವಿಸಿದರು.
ಮಂಗಳವಾರ ಆರಂಭವಾದ ಆಡಳಿತಾರೂಢ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಭಾಗವಾಗಿ ಸಿಎಂ ಹಾಗೂ ಮಾಜಿ ಸಿಎಂ ಈ ಗ್ರಾಮಕ್ಕೆ ಭೇಟಿ ನೀಡಿದರು.
ಹಿರಾಳ ಕೊಲ್ಲಾರಪ್ಪ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಬಿಜೆಪಿ ನಾಯಕರಿಗೆ 'ಕೇಸರಿ ಭಾತ್,' (ಸಿಹಿ) 'ಮಂಡಕ್ಕಿ ಒಗ್ಗರಣೆ', ಹುರಿದ ಮೆಣಸಿನಕಾಯಿ ಮತ್ತು ಉಪ್ಪಿಟ್ಟು(ಉಪ್ಮಾ) ಬಡಿಸಿದರು.
ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರು ಮತಕ್ಕಾಗಿ, ಫೋಟೋಗಾಗಿ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಇದನ್ನು ಓದಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಿಎಂ, ಮಾಜಿ ಸಿಎಂ
ದಲಿತರು ಮತ್ತು ಇತರ ಹಿಂದುಳಿದ ಸಮುದಾಯಗಳಿಗೆ ಇದುವರೆಗೆ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡರೆ, ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ಮಾಲೀಕರೊಬ್ಬರು ಹಣಕಾಸಿನ ವಿಚಾರದಲ್ಲಿ ಹತ್ತಾರು ದಲಿತ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಗೃಹ ಬಂಧನದಲ್ಲಿರಸಲಾಗಿದೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚುನಾವಣೆ ಸಮೀಪಿಸುತ್ತಿದ್ದಂತೆ ದಲಿತರು, ಹಿಂದುಳಿದವರು, ಎಸ್ಸಿ ಮತ್ತು ಎಸ್ಟಿಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಇದುವರೆಗೆ ಅವರ ಕಲ್ಯಾಣಕ್ಕಾಗಿ ಈ ಸರ್ಕಾರ ಏನೂ ಮಾಡಿಲ್ಲ. ಈಗ ಚುನಾವಣೆ ಮತ್ತು ಮತಕ್ಕಾಗಿ ದಲಿತರು ಮತ್ತು ಹಿಂದುಳಿದವರು ವಾಸಿಸುವ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.