ಚಿತ್ರದುರ್ಗ: ರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಸರ್ವಸ್ವ, ಅವರನ್ನು ಬಿಟ್ಟರೆ ಬೇರೆ ನಾಯಕರೇ ಇಲ್ಲ. ಯಡಿಯೂರಪ್ಪರನ್ನು ಬಿಟ್ಟು ಪ್ರಚಾರಕ್ಕೆ ಹೋಗಲು ಅವರಿಗೆ ಆಗುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಭಾರತ್ ಜೋಡೋ ಯಾತ್ರೆಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣವಾಗಿ ಯಡಿಯೂರಪ್ಪನವರ ಮೇಲೆ ಅವಲಂಬಿತವಾಗಿದೆ. ಅವರಿಲ್ಲದೆ ಚುನಾವಣೆ ಪ್ರಚಾರ ಮಾಡಲು ಅವರಿಂದ ಸಾಧ್ಯವಿಲ್ಲ ಎಂದಿದ್ದಾರೆ.
“ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಆರಂಭವಾದ ನಂತರ ಬಿಜೆಪಿ ನಾಯಕರಿಗೆ ಭಯ ಶುರುವಾಗಿದೆ. ಹೀಗಾಗಿ ನಮ್ಮ ವಿರುದ್ಧ ಟೀಕೆ ಮಾಡಲು ಆರಂಭಿಸಿದ್ದಾರೆ’’ ಎಂದರು.
ಇದನ್ನು ಓದಿ: ಯಡಿಯೂರಪ್ಪನವರ ಮಾತು ಕೀಳು ಅಭಿರುಚಿಯನ್ನು ತೋರಿಸುತ್ತದೆ, ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯ
ಬಿಜೆಪಿಯವರಿಗೆ ನನ್ನನು ಕಂಡರೆ ಭಯ. ಅದಕ್ಕಾಗಿ ಪದೇ ಪದೇ ನನ್ನ ಬಗ್ಗೆ ಮಾತನಾಡುತ್ತಿರುತ್ತಾರೆ. ರಾಜಕಾರಣದಲ್ಲಿ ವೈಯಕ್ತಿಕ ಟೀಕೆಗಳನ್ನು ಬಿಟ್ಟು ವಿಷಯಾಧಾರಿತವಾಗಿ ಚರ್ಚೆ ಮಾಡಬೇಕು. ಭ್ರಷ್ಟಾಚಾರ ವ್ಯಾಪಕವಾಗಿದೆ. ಅದರ ಬಗ್ಗೆ ಮಾತನಾಡಬೇಕು ಎಂದು ಕಿಡಿಕಾರಿದರು.