ರಾಜಕೀಯ

ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಲು ಬಿಜೆಪಿ ಸರ್ಕಾರದಿಂದ ಎನ್‌ಐಎ ದುರ್ಬಳಕೆ: ಪಿಎಫ್‌ಐ

Lingaraj Badiger

ಮಂಗಳೂರು: ಎನ್ಐಎ ದಾಳಿ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಮ್ಮ ಸಂಘಟನೆಯ ಮುಖಂಡರನ್ನು ಟಾರ್ಗೆಟ್ ಮಾಡುತ್ತಿದೆ. ಎನ್ಐಎ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಬುಧವಾರ ಆರೋಪಿಸಿದೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಿಎಫ್​ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್  ಅವರು ''ರಾಜ್ಯದಲ್ಲಿ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಸೇರಿದಂತೆ ಹಲವು ಕೊಲೆಗಳು ನಡೆದಿವೆ. ಬೆಳಗಾವಿಯ ಅರ್ಬಾಜ್, ಸಮೀರ್ ಶಹಾಪುರ, ಸುಳ್ಯದ ಮಸೂದ್, ಸುರತ್ಕಲ್ ನ ಫಾಝಿಲ್ ಹತ್ಯೆ ಪ್ರಕರಣಗಳ ತನಿಖೆಗೆ ಬಿಜೆಪಿ ಸರ್ಕಾರ ಯಾವುದೇ ಮಹತ್ವ ನೀಡುತ್ತಿಲ್ಲ. ಆದರೆ ಶಿವಮೊಗ್ಗದ ರೌಡಿ ಶೀಟರ್ ಹರ್ಷ ಮತ್ತು ಪ್ರವೀಣ್ ನೆಟ್ಟಾರು ಹತ್ಯೆಯನ್ನು ವೈಭವೀಕರಿಸಲಾಗಿದೆ ಎಂದು ಆರೋಪಿಸಿದರು.

ಹರ್ಷನ ಹತ್ಯೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಇದು ಗ್ಯಾಂಗ್ ವಾರ್‌ನಿಂದ ನಡೆದಿದೆ ಎಂದು ತಿಳಿದು ಬಂದಿದೆ. ಪ್ರವೀಣ್‌ ಕೊಲೆ ಸ್ಥಳೀಯ ಕೋಮು ದ್ವೇಷದ ಕಾರಣ ಎಂದು ತಿಳಿದುಬಂದಿದೆ. ಆದರೆ ರಾಜ್ಯದಲ್ಲಿ ನಡೆದ ಮುಸ್ಲಿಂ ಯುವಕರ ಹತ್ಯೆ ಪ್ರಕರಣಗಳಲ್ಲಿ ಸಂಘಪರಿವಾರದ ಕಾರ್ಯಕರ್ತರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಮಾತ್ರ ಎನ್‌ಐಎಗೆ ಹಸ್ತಾಂತರಿಸುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಅಶ್ರಫ್ ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರ ಎನ್‌ಐಎ ಅನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಮುಸ್ಲಿಂ ಯುವಕನ ವಿರುದ್ಧವೂ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಎನ್‌ಐಎಯಂತಹ ತನಿಖಾ ಸಂಸ್ಥೆಗಳನ್ನು ಬಿಜೆಪಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

SCROLL FOR NEXT