ಕೋಲಾರ: ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳ ಕೊಲೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಕಿಡಿಕಾರಿದ್ದಾರೆ.
ಏಪ್ರಿಲ್ 9 ರಂದು ಕೋಲಾರದಲ್ಲಿ ನಡೆಯಲಿರುವ ಜೈ ಭಾರತ್ ರ್ಯಾಲಿಯ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ, ರಾಹುಲ್ ಅವರನ್ನು ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ, ಇದು ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೊಟಕುಗೊಳಿಸಿ ನಿರಂಕುಶ ಪ್ರಭುತ್ವದ ಆರಂಭವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು.
ಇದೇ ವೇಳೆ ಪ್ರಜಾಪ್ರಭುತ್ವವನ್ನು ರಕ್ಷಿಸಲು ಜೈ ಭಾರತ್ ಅಭಿಯಾನದಲ್ಲಿ ರಾಹುಲ್ ಅವರೊಂದಿಗೆ ಕೈಜೋಡಿಸುವಂತೆ ಜನತೆಗೆ ಸುರ್ಜೇವಾಲಾ ಕರೆ ನೀಡಿದರು.
ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ; ಕಾಂಗ್ರೆಸ್ಗೆ ಪ್ರಚಾರದ ವಿಷಯ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕೊಡುಗೆ ನೀಡುತ್ತದೆ: ವೀರಪ್ಪ ಮೊಯ್ಲಿ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ರಾಹುಲ್ ದೇಶದ ಜನರಿಗಾಗಿ ಧ್ವನಿ ಎತ್ತುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಮಾತನಾಡಿ ಭಾರತ್ ಜೋಡೋ ಯಾತ್ರೆಯ ಯಶಸ್ಸನ್ನು ಸಹಿಸಲಾಗದೆ ಬಿಜೆಪಿ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸುತ್ತಿದೆ ಎಂದು ತಿಳಿಸಿದರು.