ಶಿವಮೊಗ್ಗ: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ. ಹೀಗಾಗಿ ಅಲ್ಲೊಬ್ಬ ಇಲ್ಲೊಬ್ಬ ಎಂದು ನಾಯಕರನ್ನು ಆಹ್ವಾನಿಸುತ್ತಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ಹಲವು ಶಾಸಕರನ್ನು ಸಂಪರ್ಕಿಸಿ ಟಿಕೆಟ್ ಆಫರ್ ನೀಡಿದ್ದರು. ಸಮರ್ಥ ಅಭ್ಯರ್ಥಿಗಳನ್ನು ಪ್ರಸ್ತುತಪಡಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಹೀಗಾಗಿಯೇ ಮೀಸಲಾತಿ ಅಥವಾ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟ ನಿಲುವು ತಿಳಿಸಲು ಆ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ಯಾರು ಬೇಕಾದ್ರೂ ಬನ್ನಿ, ಹೋರಾಡಲು ನಾನು ಸಿದ್ಧ; ಶಿಗ್ಗಾಂವಿಯಲ್ಲಿ ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ ಸವಾಲ್
2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷ ಮತ್ತಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಟಿಕೆಟ್ಗಾಗಿ ಬಿಜೆಪಿ ಪಕ್ಷದಲ್ಲಿ ಎದುರಾಗಿರುವ ತೀವ್ರ ಪೈಪೋಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ. ಹಲವು ಆಕಾಂಕ್ಷಿಗಳಿರುವುದು ನಿಜ, ವಾರಾಂತ್ಯದಲ್ಲಿ ಪಕ್ಷ ಸಭೆ ಸೇರಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನಿರ್ಧರಿಸಲಾಗುವುದು. ತಾಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಪರಿಗಣಿಸಿ, ಚರ್ಚಿಸಿ, ವಿಶ್ಲೇಷಿಸಿ ಪ್ರಜಾಸತ್ತಾತ್ಮಕವಾಗಿ ಅಭ್ಯರ್ಥಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಪ್ರತಿ ಕ್ಷೇತ್ರಕ್ಕೆ ಮೂರು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.