ರಾಜಕೀಯ

'ನಮ್ಮಲ್ಲಿ ಏನೂ ಕೆಲಸ ಮಾಡಿಲ್ಲ, ಈಗ ಯಾಕೆ ಬರುತ್ತೀರಿ': ಸಚಿವೆ ಶಶಿಕಲಾ ಜೊಲ್ಲೆಗೆ ಚಿಕ್ಕೋಡಿ ತಾಲ್ಲೂಕಿನ ಗಲಟಗಾ ಗ್ರಾಮಸ್ಥರ ಘೇರಾವ್!

Sumana Upadhyaya

ಚಿಕ್ಕೋಡಿ: ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಮುಜುಗರವೆಂಬಂತಹ ಘಟನೆ ನಡೆದಿದ್ದು,  ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಗ್ರಾಮಕ್ಕೆ ಪ್ರವೇಶಿಸದಂತೆ ಸ್ಥಳೀಯರು ತಡೆಹಿಡಿದಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗಲಟಗಾಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ. ಜೊಲ್ಲೆ ಗ್ರಾಮಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಮೂಲಸೌಕರ್ಯಗಳನ್ನು ಸರ್ಕಾರ ಮಾಡಿಲ್ಲ ಎಂದು ಶಶಿಕಲಾ ಜೊಲ್ಲೆ ಬರುತ್ತಿರುವ ವೇಳೆ ಗ್ರಾಮಸ್ಥರು ಆರೋಪಿಸಿ ಬರದಂತೆ ತಡೆದರು ಎಂದು ಹೇಳಲಾಗುತ್ತಿದೆ. 

ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಾ ಸಚಿವೆಯನ್ನು ಸುತ್ತುವರೆದು, ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಬೆಳಗಾವಿಯ ನಿಪ್ಪಾಣಿ ಕ್ಷೇತ್ರದ ಶಾಸಕಿಯಾದ ಶಶಿಕಲಾ ಜೊಲ್ಲೆ ಅವರು ಚುನಾವಣಾ ಸಮಯದಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂತು. ಇದುವರೆಗೆ ಇತ್ತ ಸುಳಿದಿರದ ಸಚಿವೆ ಇಂದು ಬರುತ್ತಿದ್ದಾರೆ ಎಂದು ಸಿಟ್ಟು ಹೊರಹಾಕಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು: ಇತ್ತೀಚೆಗೆ ಶಶಿಕಲಾ ಜೊಲ್ಲೆ ಅವರು ಮಹಿಳಾ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸನ್ಮಾನ, ಉಡುಗೊರೆ ವಿತರಣೆ, ಅನ್ನಸಂತರ್ಪಣೆ, ಮನರಂಜನಾ ಕಾರ್ಯಕ್ರಮಗಳು ನಡೆದವು. ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಸಚಿವೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

SCROLL FOR NEXT