ಬೆಂಗಳೂರು: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಟಿಕೆಟ್ ಮಿಸ್ ಆದ ಮುಖಂಡರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
2008 ರ ಚುನಾವಣೆಯಲ್ಲಿ ಮಾಜಿ ಸಿಎಂ ದಿವಂಗತ ಧರಂ ಸಿಂಗ್ ಅವರನ್ನು ಸೋಲಿಸಿದ ಮತ್ತು 2013 ಮತ್ತು 2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಜಯ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಸೇರಿದಂತೆ ಅನೇಕ ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಕಲಬುರಗಿಯ ಕಾಂಗ್ರೆಸ್ ಮುಖಂಡ ಕೃಷ್ಣಾಜಿ ಕುಲಕರ್ಣಿ, ಯಾದಗಿರಿಯ ಡಾ.ಎ.ಬಿ.ಮಾಲಕರೆಡ್ಡಿ, ಶಹಾಪುರದ ಗುರು ಪಾಟೀಲ ಶಿರವಾಳ ಅವರ ಬೆಂಬಲಿಗರು ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಒಂದು ಕಾಲದಲ್ಲಿ ಉತ್ತರ ಕರ್ನಾಟಕ ಜನತಾ ಪರಿವಾರ ಅದರಲ್ಲೂ ಜೆಡಿಎಸ್ನ ಭದ್ರಕೋಟೆಯಾಗಿತ್ತು ಎಂದು ಹೇಳಿದರು.
ಇದನ್ನೂ ಓದಿ: ಕುಮಾರಸ್ವಾಮಿ ಎಷ್ಟೇ ಪಂಚರತ್ನ ಯಾತ್ರೆ ಮಾಡಿದ್ರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ
ಆದರೆ, ಈ ಭಾಗದ ಹಲವು ಮುಖಂಡರು ಹಲವು ಕಾರಣಕ್ಕೆ ಜೆಡಿಎಸ್ ತೊರೆದಿದ್ದಾರೆ. ಈಗ ಮತ್ತೆ ಜೆಡಿಎಸ್ ಸೇರುತ್ತಿದ್ದಾರೆ. ತಮ್ಮನ್ನು ಭೇಟಿಯಾದ ನಾಯಕರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತೊರೆದವರಿಗೆ ಜೆಡಿಎಸ್ ಸ್ವಾಗತ ಸಮಾರಂಭವನ್ನು ಆಯೋಜಿಸಲಿದೆ. ಶುಕ್ರವಾರ ಸಂಜೆ ಅಥವಾ ಶನಿವಾರ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.