ರಾಜಕೀಯ

ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಪುತ್ರನ ಕಣಕ್ಕಿಳಿಸಲು ರೋಷನ್ ಬೇಗ್ ಮುಂದು!

Manjula VN

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಬಿಜೆಪಿ ಪುತ್ರನಿಗೆ ಟಿಕೆಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರು, ತಮ್ಮ ಪುತ್ರ ರುಮಾರ್ ಬೇಗ್ ಅವರನ್ನು ಸ್ವತಂತ್ರ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ರೋಷನ್ ಬೇಗ್ ಅವರು  ಭಾರತೀನಗರದ ನಿವಾಸದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದರು. ಈ ವೇಳೆ ಈ ನಿರ್ಧಾರ ಕೈಗೊಂಡಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಬಯಸುತ್ತಿಲ್ಲ. ನನ್ನ ಮಗ ಶಿವಾಜಿನಗರದಿಂದ ಸ್ಪರ್ಧಿಸಬೇಕು ಎಂಬುದು ನನ್ನ ಆಸೆ. ಬಿಜೆಪಿಯಿಂದ ಟಿಕೆಟ್ ಪಡೆಯಲು ಪ್ರಯತ್ನಿಸಿದೆ. ಈ ಬಾರಿಯ ಚನಾವಣೆಯಲ್ಲಿ ಮುಸ್ಲಿಮರಿಗೆ ಎರಡು ಟಿಕೆಟ್‌ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಒಂದು ಹೈದರಾಬಾದ್-ಕರ್ನಾಟಕ ಪ್ರದೇಶದಿಂದ ಮತ್ತು ಮತ್ತೊಂದು ಶಿವಾಜಿನಗರದಿಂದ ನೀಡುವುದಾಗಿ ತಿಳಿಸಿತ್ತು. ಆದರೀಗ ಟಿಕೆಟ್ ನಿರಾಕರಿಸಿದೆ. ಹೀಗಾಗಿ ಪುತ್ರನನ್ನು ಸ್ವತಂತ್ರ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ರೋಷನ್ ಬೇಗ್ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಮಗನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ನನ್ನ ಮಗ ಚಿಕ್ಕವನು. ಆತ ಚುನಾವಣೆಗೆ ಸ್ಪರ್ಧಿಸಿದರೆ ಒಳ್ಳೆಯದು. ಒಂದೆರೆಡು ದಿನದಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದ್ದು, ನಿರ್ಧಾರ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

ಬೇಗ್ ಬೆಂಬಲಿಗ ಶಕೀಲ್ ಉಸ್ಮಾನಿ ಮಾತನಾಡಿ, ಬಿಜೆಪಿ ಟಿಕೆಟ್ ನೀಡದ ಕಾರಣ ನಿರಾಸೆಯಾಗಿದೆ. ರೋಷನ್ ಬೇಗ್ ಅವರು ಮಾಸ್ ಲೀಡರ್. ಶಿವಾಜಿನಗರದ ನಾಡಿಮಿಡಿತವನ್ನು ಗ್ರಹಿಸುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಮತ್ತು ಇತರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರಿಂದ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದೆವು. ಆದರೆ ಅವರು, ಈ ಬಗ್ಗೆ ಆಸಕ್ತಿ ತೋರಿಸಲಿಲ್ಲ. ಹಾಗಾಗಿ ರುಮಾನ್ ಬೇಗ್ ಗೆ ಜೆಡಿಎಸ್'ನಿಂದ ಟಿಕೆಟ್ ಬಯಸುತ್ತಿದ್ದೇವೆ. ನಾವು ರುಮಾನ್ ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

SCROLL FOR NEXT