ರಾಜಕೀಯ

ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ

Ramyashree GN

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮಂಗಳವಾರ ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಅವರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಲಾದ ರೋಡ್ ಶೋನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಟ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಬಾಗಲಕೋಟೆಯ ಮುಧೋಳ ಮೀಸಲು ಕ್ಷೇತ್ರದಿಂದ ಕಾರಜೋಳ ಹಾಗೂ ಬಿಳಗಿಯಿಂದ ನಿರಾಣಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬೊಮ್ಮಾಯಿ ಮತ್ತು ಸುದೀಪ್ ಅವರು ವಿಶೇಷ ಹೆಲಿಕಾಪ್ಟರ್‌ನಲ್ಲಿ ಈಗಾಗಲೇ ಜಿಲ್ಲೆಗೆ ಆಗಮಿಸಿದ್ದಾರೆ.

ಈ ನಿಟ್ಟಿನಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಈಗಾಗಲೇ ಭಿತ್ತಿಪತ್ರ ಹಾಗೂ ವಿಶೇಷ ಆಹ್ವಾನ ಪತ್ರಿಕೆಗಳನ್ನು ಮಾಡಿದ್ದಾರೆ.

ಕಿಚ್ಚ ಸುದೀಪ್ ಅವರನ್ನು ಪ್ರಚಾರಕ್ಕೆ ಇಳಿಸುವ ಮೂಲಕ ಬಿಜೆಪಿ ಪಕ್ಷವು ಉತ್ತರ ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ಮತದಾರರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. 

ಬಾಗಲಕೋಟೆಯಲ್ಲಿ 2.65 ಲಕ್ಷ ಎಸ್‌ಸಿ ಮತಗಳು ಮತ್ತು 1.25 ಲಕ್ಷ ಎಸ್‌ಟಿ ಮತಗಳಿವೆ. ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿವೆ.

ದಕ್ಷಿಣ ಕರ್ನಾಟಕದಲ್ಲಿ ಕಿಚ್ಚ ಸುದೀಪ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೆಗಾ ಕಾರ್ಯಕ್ರಮವನ್ನು ಪಕ್ಷವು ಯೋಜಿಸುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

SCROLL FOR NEXT