ರಾಜಕೀಯ

ಬಹುಮತದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ

Manjula VN

ಕಲಬುರಗಿ: ಈ ಬಾರಿಯ ವಿಧಾನಸಭೆ ಚುನಾವಣೆ ಬಳಿಕ ಬಹುಮತದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾಸ ವಿಶ್ವಾಸ ವ್ಯಕ್ತಪಡಿಸಿದರು.

ಅಫಜಲಪುರದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕೊಡುಗೆಗಳ ಬಗ್ಗೆ ಜನರಿಗೆ ತಿಳಿದಿದೆ. ಈ ಬಾರಿ ಬಿಜೆಪಿ ಬಹುಮತದ ಮೂಲಕ ಸರ್ಕಾರವನ್ನು ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾತೆತ್ತಿದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಸಾಮಾಜಿಕ ನ್ಯಾಯ ಎಲ್ಲಿದೆ? ಸಾಮಾಜಿಕ ನ್ಯಾಯ ಯಾರಿಗೆ ಕೊಟ್ಟಿದ್ದೀರಿ? ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದರು.

ಬಿಜೆಪಿ ಜಾರಿಗೆ ತಂದಿರುವ ಶೋಷಿತ ಸಮುದಾಯಗಳ ಒಳಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದೆ. ತಾವು ಅಧಿಕಾರಕ್ಕೆ ಬಂದ ನಂತರ ರದ್ದು ಮಾಡುತ್ತೇವೆಂದು ಹೇಳುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್'ಗೆ ನೀವು ಹಾಕುವ ಒಂದೊಂದು ಮತವೂ ಮೀಸಲಾತಿ ರದ್ಧತಿಗೆ ಸಹಕರಿಸಿದಂತಾಗುತ್ತದೆ. ಹಾಗಾಗಿ ಕಾಂಗ್ರೆಸ್ ತಿರಸ್ಕರಿಸಿ ಬಿಜೆಪಿ ಪುರಸ್ಕರಿಸಿ ಎಂದು ಜನತೆಗೆ ಕರೆ ನೀಡಿದರು.

ಒಂದು ವೇಳೆ ಮೀಸಲಾತಿ ಪ್ರಕ್ರಿಯೆ ರದ್ದುಪಡಿಸಿದ್ದೇ ಆದರೆ, ಕರ್ನಾಟಕದಲ್ಲಿ ಸಾಮಾಜಿಕ ಕ್ರಾಂತಿ ಆಗುತ್ತದೆ. ಶೋಷಿತ ಸಮುದಾಯಗಳಗೆ ನ್ಯಾಯ ಬದ್ಧ ಮೀಸಲಾತಿ ಕಲ್ಪಿಸಿರುವ ರಾಜ್ಯ ಬಿಜೆಪಿ ಸರ್ಕಾರದ ಮೀಸಲಾತಿಗೆ ಕಾಂಗ್ರೆಸ್ ವಿರೋಧವಿದೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಬೀಳುವ ಒಂದೊಂದು ಮತವೂ ಒಳಮೀಸಲಾತಿ ರದ್ದುಗೊಳ್ಳಲು ಸಹಾಯ ಮಾಡಿದಂತಾಗುವುದರಿಂದ ಯೋಚಿಸಿ ಮತ ಹಾಕಿ ಎಂದರು.

ಇದಕ್ಕೂ ಮುನ್ನ ಅಫಜಲಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಏಪ್ರಿಲ್ 24 ರಿಂದ ರಾಜ್ಯದಾದ್ಯಂತ 20 ಕಡೆ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಭಾಗವಹಿಸಲಿದ್ದಾರೆಂದು ಹೇಳಿದರು.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್ ಮತ್ತು ರಾಯಚೂರಿನಲ್ಲಿ ಚುನಾವಣಾ ಪ್ರಚಾರದಲ್ಲೂ ಮೋದಿಯವರು ಭಾಗವಹಿಸಬಹುದು ಎಂದು ಹೇಳಿದರು.

ಕನಕಪುರದಿಂದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿರುವ ಕುರಿತು ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕ್ಷೇತ್ರದ ಚುನಾವಣೆಯಲ್ಲಿ ಸೋಲುವ ಆತಂಕದಲ್ಲಿದ್ದಾರೆಂದು ಹೇಳಿದರು.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಸಮುದಾಯವನ್ನು ವಿಭಜಿಸಿದ್ದು ಕಾಂಗ್ರೆಸ್. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಲಿಂಗಾಯತ ಸಮುದಾಯದ 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ತಿಳಿಸಿದರು.

SCROLL FOR NEXT