ರಾಜಕೀಯ

ಬಸವ ಜಯಂತಿಯ ಲಾಭ ಪಡೆಯಲು ಮುಂದಾದ ಬಿಜೆಪಿ, ಕಾಂಗ್ರೆಸ್; ವೀರಶೈವ-ಲಿಂಗಾಯತ ಮತಬ್ಯಾಂಕ್ ಓಲೈಸಲು ತಂತ್ರ

Ramyashree GN

ಬೆಂಗಳೂರು: ನಾಮಪತ್ರಗಳ ಪರಿಶೀಲನೆ ಅಂತ್ಯಗೊಂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ತಮ್ಮ ಬಿರುಸಿನ ಪ್ರಚಾರವನ್ನು ಆರಂಭಿಸಲು ಸಜ್ಜಾಗಿವೆ. ಆರಂಭದಲ್ಲಿ, ಪ್ರಬಲ ವೀರಶೈವ-ಲಿಂಗಾಯತ ಸಮುದಾಯವನ್ನು ತಮ್ಮ ಪರವಾಗಿ ಒಲಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾನುವಾರದಂದು ಬಸವ ಜಯಂತಿಯನ್ನು ವಿಶೇಷ ಕಾರ್ಯಕ್ರಮವನ್ನಾಗಿ ಮಾಡಲು ನಿರ್ಧರಿಸಿವೆ.

ಯಲಹಂಕದಲ್ಲಿ ಬಿಜೆಪಿ ಪಥಸಂಚಲನಕ್ಕೆ ಚಾಲನೆ ನೀಡುವ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ನಗರದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಲಿಂಗಾಯತ ಹೃದಯಭೂಮಿ ಎಂದೇ ಪರಿಗಣಿಸಲಾಗಿರುವ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಕೂಡಲಸಂಗಮದಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಹುಲ್ ಭೇಟಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಸಮುದಾಯದ ಒಂದು ವರ್ಗ ಮತ್ತು ಅದರ ಮುಖಂಡರಿಗೆ ನೈತಿಕ ಸ್ಥೈರ್ಯವನ್ನು ನೀಡುತ್ತದೆ ಎಂದು ರಾಜಕೀಯ ಪಂಡಿತರು ಹೇಳಿದ್ದಾರೆ.

1990ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ವೀರೇಂದ್ರ ಪಾಟೀಲ್ ಅವರನ್ನು ಸಿಎಂ ಸ್ಥಾನದಿಂದ ಪದಚ್ಯುತಗೊಳಿಸಿದ ನಂತರ ಕಾಂಗ್ರೆಸ್‌ನಿಂದ ದೂರ ಸರಿದಿದ್ದ ಲಿಂಗಾಯತ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಇದಾಗಿದೆ ಎಂದು ಅವರು ಹೇಳಿದ್ದಾರೆ. 

ಕೂಡಲಸಂಗಮ ಕಾರ್ಯಕ್ರಮದ ನಂತರ ರಾಹುಲ್ ವಿಜಯಪುರದಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ರಾಮದುರ್ಗದಲ್ಲಿ ಕಬ್ಬು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಹಾನಗಲ್‌ನಲ್ಲಿ ನಡೆಯುವ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಮುನ್ನ ಗದಗದಲ್ಲಿ ಯುವ ಸಂವಾದದಲ್ಲಿ ಭಾಗವಹಿಸಲಿದ್ದಾರೆ. 

ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು, ಅರಸೀಕೆರೆ, ಕಡೂರು ಮತ್ತು ದಾವಣಗೆರೆಯಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಲಿದ್ದಾರೆ.

SCROLL FOR NEXT