ದಾವಣಗೆರೆ: ಕೇವಲ ತೋರಿಕೆಗಷ್ಟೇ ಲಿಂಗಾಯತ ಸಮುದಾಯದ ಮಠಗಳಿಗೆ ಭೇಟಿ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವು ಬಿಜೆಪಿ ರಾಷ್ಟ್ರೀಯ ನಾಯಕರು ಸ್ಟಾರ್ ಪ್ರಚಾರಕರಾಗಿ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು.
'2018ರ ವಿಧಾನಸಭೆ ಚುನಾವಣೆಗಿಂತ ಈ ಬಾರಿ ಬಿಜೆಪಿ ಹೆಚ್ಚು ಮತ ಗಳಿಸಲಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಲಾಗುವುದು. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಶೆಟ್ಟರ್ ಮತ್ತು ಸವದಿ ವಿರುದ್ಧ ಮತದಾರರು ಇದ್ದಾರೆ. ಅಧಿಕಾರ ಅನುಭವಿಸಿ ಕಾಂಗ್ರೆಸ್ ಸೇರಿದ್ದಾರೆ. ಇದನ್ನು ಜನ ಒಪ್ಪಿಕೊಳ್ಳುವುದಿಲ್ಲ' ಎಂದರು.
ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಊಹಿಸಿರಲಿಲ್ಲ. ಆದರೆ, ಹೈಕಮಾಂಡ್ ನಿರ್ಧರಿಸಿದೆ. ಅದರಂತೆ ಈಗಲೂ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಎಲ್ಲವನ್ನೂ ದೆಹಲಿಯ ನಾಯಕರು ಗಮನಿಸುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಶೆಟ್ಟರ್, ಸವದಿ ಕಾಂಗ್ರೆಸ್ ಸೇರಿದ್ದು ನಮಗೆ ಪ್ಲಸ್ ಆಗತ್ತೆ, ಸಿದ್ದರಾಮಯ್ಯ ಲಿಂಗಾಯತ ಹೇಳಿಕೆಯನ್ನು ತಿರುಚಿಲ್ಲ: ಸಿಎಂ ಬೊಮ್ಮಾಯಿ
ಬಿಜೆಪಿಯವರು ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರೇ ಲಿಂಗಾಯತ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಶಿವಕುಮಾರ್ಗೆ ಹೇಳಿದ್ದನ್ನು ಬಿಟ್ಟು ಬೇರೊಂದು ಕೆಲಸ ಮಾಡುವ ಅಭ್ಯಾಸವಿದೆ. ದೇವರು ಯಾರನ್ನು ಆಶೀರ್ವದಿಸುತ್ತಾರೆಂದು ಕಾದು ನೋಡೋಣ ಎಂದು ತಿಳಿಸಿದರು.
ಲಿಂಗಾಯತ ಸಿಎಂ ಕುರಿತ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಜನರು ಮೂರ್ಖರಲ್ಲ, ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.
ಲಂಚ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಪುತ್ರನ ಪರ ಪ್ರಚಾರ ನಡೆಸುತ್ತಿರುವ ಬಗ್ಗೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.