ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾಜ್ಯದಲ್ಲಿ ತಮ್ಮ ಪಕ್ಷಗಳ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಿಯಾಂಕಾ ಗಾಂಧಿ ದಕ್ಷಿಣ ಕರ್ನಾಟಕದತ್ತ ಗಮನ ಹರಿಸಿದರೆ, ಶಾ ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರವಾಸ ಕೈಗೊಂಡ ಒಂದು ದಿನದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಹು ನಿರೀಕ್ಷಿತ ಚುನಾವಣೆಯಲ್ಲಿ ಬಿಜೆಪಿಗೆ 40 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಂತೆ ಮತದಾರರಲ್ಲಿ ರಾಹುಲ್ ಗಾಂಧಿ ಮನವಿ ಮಾಡಿದರು.
ಆಂತರಿಕ ಸಮೀಕ್ಷೆಗಳು ಮತ್ತು ಬಿಜೆಪಿಯಲ್ಲಿನ ಬಂಡಾಯದಿಂದ ಉತ್ತೇಜಿತವಾಗಿರುವ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ. ಕರ್ನಾಟಕದಲ್ಲಿ ಗೆಲುವು ಸಾಧಿಸುವ ಮೂಲಕ 2024ರ ಲೋಕಸಭೆ ಚುನಾವಣೆಗೆ ಸಜ್ಜಾಗಲು ಪಕ್ಷವು ಬಯಸಿದೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.
ಇದನ್ನೂ ಓದಿ: ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ವಸತಿ ಸಚಿವ ವಿ ಸೋಮಣ್ಣ ನಡುವೆ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ. ಸೋಮಣ್ಣ ಚಾಮರಾಜನಗರದಿಂದಲೂ ಸ್ಪರ್ಧಿಸುತ್ತಿದ್ದಾರೆ.
ಟಿ.ನರಸೀಪುರದ ಹೆಳವರಹುಂಡಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಚಾಮರಾಜನಗರದ ಹನೂರು ಪಟ್ಟಣದ ಗೌರಿಶಂಕರ ಸಭಾಂಗಣದಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಜೆ ಕೆ.ಆರ್. ನಗರದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮೆರವಣಿಗೆಯಲ್ಲಿ ಕೂಡ ಪ್ರಿಯಾಂಕಾ ಪಾಲ್ಗೊಳ್ಳಲಿದ್ದಾರೆ.
ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ಸರಣಿ ರೋಡ್ಶೋ ಮತ್ತು ಸಾರ್ವಜನಿಕ ರ್ಯಾಲಿಗಳನ್ನು ನಡೆಸಿದ ನಂತರ, ಕೇಂದ್ರ ಗೃಹ ಸಚಿವರು ಮಂಗಳವಾರ ವಿಜಯಪುರ, ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಮ್ಮ ಹೈವೋಲ್ಟೇಜ್ ಪ್ರಚಾರವನ್ನು ಮುಂದುವರಿಸಲಿದ್ದಾರೆ.
ಇದನ್ನೂ ಓದಿ: 'ಕರ್ನಾಟಕಕ್ಕೆ ಡಬಲ್ ಎಂಜಿನ್ ಸರ್ಕಾರ ಬೇಕಾ, ರಿವರ್ಸ್ ಗೇರ್ ಸರ್ಕಾರ ಬೇಕಾ ನೀವೇ ನಿರ್ಧರಿಸಿ': ಅಮಿತ್ ಶಾ
ಬಾಗಲಕೋಟೆಯ ತೇರದಾಳ ಕ್ಷೇತ್ರದ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಶಾ ಪ್ರಚಾರ ನಡೆಸಲಿದ್ದಾರೆ. ನಂತರ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಜಯಪುರದ ದೇವರಹಿಪ್ಪರಗಿ ತಲುಪಿ ಬೃಹತ್ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕ್ಷೇತ್ರದ ಏಳು ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಯಾದಗಿರಿಯಲ್ಲಿ ರೋಡ್ ಶೋನಲ್ಲಿ ಶಾ ಭಾಗವಹಿಸಲಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ವಿಜಾಪುರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸುತ್ತಾರೆ ಮತ್ತು ಮಠಗಳಿಗೆ ಭೇಟಿ ನೀಡಲಿದ್ದಾರೆ.