ರಾಜಕೀಯ

2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರಿಣಾಮ ಅಧ್ಯಯನಕ್ಕೆ ಬಿಜೆಪಿ ಮುಂದು!

Manjula VN

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿಯಾಗಿಸುತ್ತದೆ ಮತ್ತು ಅಭಿವೃದ್ಧಿಗೆ ಮೀಸಲಿಟ್ಟ ಹಣ ಖಾಲಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭವಿಷ್ಯ ನುಡಿದಿದ್ದು, ಇದರ ನಡುವಲ್ಲೇ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆಯಲ್ಲಿ ತೊಡಗಿರುವ ರಾಜ್ಯ ಬಿಜೆಪಿ ಮುಖಂಡರು ಗ್ಯಾರಂಟಿ ಯೋಜನೆಗಳ ಪರಿಣಾಮ ಕುರಿತು ಅಧ್ಯಯನ ನಡೆಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

5 ಗ್ಯಾರಂಟಿ ಯೋಜನೆಗಲ ಪೈಕಿ ಅನ್ನಭಾಗ್ಯ, ಗೃಹ ಲಕ್ಷ್ಮಿ, ಶಕ್ತಿ, ಗೃಹ ಜ್ಯೋತಿ ಯೋಜನೆ ಜಾರಿಯಾಗಿದ್ದು, ಯುವ ನಿಧಿ ಯೋಜನೆ ಜಾರಿಯಾಗುವುದು ಬಾಕಿ ಉಳಿದಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಈ 5 ಗ್ಯಾರಂಟಿ ಯೋಜನೆಗಲೇ ಪ್ರಮುಖ ಕಾರಣವೆಂದು ಹೇಳಲಾಗಿದೆ.

ಹೀಗಾಗಿ ಈ ಗ್ಯಾರಂಟಿ ಯೋಜನೆಗಳು ಮತದಾರರ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತಿದೆ, ಗ್ಯಾರಂಟಿ ಯೋಜನೆಗಳಿಂದ ಮತಗಳು ಪರಿವರ್ತನೆಗೊಳ್ಳಲಿವೆಯೇ ಎಂಬುದರ ಕುರಿತು ಅಧ್ಯಯನ ನಡೆಸಲು ಚಿಂತನೆ ನಡೆಸುತ್ತಿದ್ದೇವೆಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷವನ್ನು ಎದುರಿಸಲು, ಜನರು ಉಚಿತ ಯೋಜನೆಗಳಿಗೆ ಆಕರ್ಷಿತರಾಗುತ್ತಿದ್ದಾರೆಯೇ ಎಂಬುದರ ಕುರಿತು ಅಧ್ಯಯನ ನಡೆಸುವುದು ಅಗತ್ಯವಿದೆ. ಹೀಗಾಗಿ ತಂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದು, 2024 ರಲ್ಲಿ ಸ್ಥಾನಗಳನ್ನು ಉಳಿಸಿಕೊಳ್ಳುವುದು ಪಕ್ಷಕ್ಕೆ ಈಗ ಸವಾಲಾಗಿದೆ. ಬೆಂಗಳೂರಿನಲ್ಲಿ 26 ವಿರೋಧ ಪಕ್ಷಗಳು I.N.D.I.A ಮೈತ್ರಿ ಆರಂಭಿಸಿರುವುದರಿಂದ ಈ ಚುನಾವಣೆ ನಿರ್ಣಾಯಕವಾಗಿದೆ.

ಗ್ಯಾರಂತಿ ಯೋಜನಗೆಳನ್ನು ಸರ್ಕಾರವು ಎಷ್ಟು ಸಮಯದವರೆಗೆ ಕಾರ್ಯಗತಗೊಳಿಸಬಹುದು ಎಂಬುದರ ಬಗ್ಗೆ ಈಗಾಗಲೇ ಸಂದೇಹಗಳು ಶುರುವಾಗಿದ್ದು, ಜನವರಿ ವೇಳೆಗೆ ಸರ್ಕಾರಕ್ಕೆ ಸವಾಲುಗಳು ಎದುರಾಗಬಹುದು. ಈ ಕುರಿತು ಅಧ್ಯಯನ ನಡೆಸಬೇಕೆಂದು ಪಕ್ಷದ ಹಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಯೋಜನೆ ಅನುಷ್ಠಾನದಲ್ಲಿ ಆಗಿರುವ ತಪ್ಪುಗಳು, ವೈಫಲ್ಯಗಳು, ಹಣಕಾಸಿನ ಮುಗ್ಗಟ್ಟು ಎದುರಾಗುವುದು ಅಧ್ಯಯನದಲ್ಲಿ ತಿಳಿದುಬಂದಿದ್ದೇ ಆದರೆ, ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿಗೆ ಸುಲಭವಾಗಲಿದ ಎಂಬು ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದ ವಿಷಯಗಳನ್ನು ಎತ್ತಿ ಹಿಡಿಯುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹಿರಿಯ ನಾಯಕ ಮತ್ತು ಮಾಜಿ ಸಚಿವ ಡಾ ಸಿ ಎನ್ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಈ ನಡುವೆ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಭ್ರಷ್ಟಾಚಾರ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ವರ್ಗಾವಣೆಗಾಗಿ 1000 ಕೋಟಿ ರೂ.ಗಳನ್ನು ಸರ್ಕಾರ ಪಡೆದಿದೆ ಎಂದು ಆರೋಪಿಸಿದ್ದಾರೆ.

“ಗ್ಯಾರಂಟಿ ಯೋಜನೆಗಳಿಗೆ 20,000 ಕೋಟಿ ರೂ.ಗಳಿಂದ 25,000 ಕೋಟಿ ರೂ.ಗಳು ಸಾಕಾಗುತ್ತದೆ, ಆದರೆ ಕಳೆದ ವರ್ಷ 40,000 ಕೋಟಿ ಹೆಚ್ಚುವರಿ ತೆರಿಗೆ ಆದಾಯವಾಗಿ ಸಂಗ್ರಹಿಸಲಾಗಿದೆ. ನಿರೀಕ್ಷೆಗೂ ಮೀರಿ ತೆರಿಗೆ ಸಂಗ್ರಹವಾಗಿದೆ. ಆದರೆ ಸಿದ್ದರಾಮಯ್ಯ ಏಕೆ ಕೊರತೆ ಬಜೆಟ್ ಮಂಡಿಸಿದ್ದಾರೆ? ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ.

SCROLL FOR NEXT