ರಾಜಕೀಯ

ಬಸವರಾಜ ಬೊಮ್ಮಾಯಿಗೆ ಹೈಕಮಾಂಡ್‌ ಬುಲಾವ್; ಇಂದು ಅಮಿತ್ ಶಾ ಭೇಟಿ, ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆ

Ramyashree GN

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದು, ವಿರೋಧ ಪಕ್ಷದ ನಾಯಕನ ನೇಮಕದ ವಿಚಾರವಾಗಿ ಚರ್ಚಿಸುವ ಸಾಧ್ಯತೆಯಿದೆ.
ಬೊಮ್ಮಾಯಿ ಈಗಾಗಲೇ ರಾಷ್ಟ್ರ ರಾಜಧಾನಿ ತಲುಪಿದ್ದು, ಇಂದು ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರೇ ಸೂಕ್ತ ಎಂದು ಹೇಳಿದ್ದು, ಈ ಸಭೆ ಮಹತ್ವ ಪಡೆದುಕೊಂಡಿದೆ.

ಶಾ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ಚರ್ಚಿಸಲು ಮತ್ತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭೆ ಚುನಾವಣೆ ನಡೆದು ಮೂರು ತಿಂಗಳು ಕಳೆದಿದ್ದರೂ ಬಿಜೆಪಿ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.

ಬಿಜೆಪಿಯ ಎಲ್ಲಾ 66 ಶಾಸಕರು ವಿರೋಧ ಪಕ್ಷದ ನಾಯಕರಾಗಿದ್ದು, ರಾಜ್ಯ ಸರ್ಕಾರ ಎಚ್ಚರಿಕೆಯಿಂದ ನಡೆಯಬೇಕು ಎಂದು ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತಷ್ಟು ಟೀಕೆಗೆ ಕಾರಣವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಬಿಜೆಪಿ ಹೈಕಮಾಂಡ್ ಕರ್ನಾಟಕದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ನಾಯಕರಿಲ್ಲದೇ ಬಜೆಟ್ ಅಧಿವೇಶನ ಕೂಡ ನಡೆದಿದ್ದು, ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ರಾಜ್ಯ ರಾಜಕಾರಣದಲ್ಲಿಯೇ ಮೊದಲು ಎಂದು ಬಿಜೆಪಿಯನ್ನು ಟೀಕಿಸಲಾಗಿತ್ತು. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರೊಂದಿಗೆ ಹೈಕಮಾಂಡ್ ಈಗಾಗಲೇ ಮಾತುಕತೆ ನಡೆಸಿದೆ.

ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ (ಬ್ರಾಹ್ಮಣ), ವಿ.ಸುನೀಲ್ ಕುಮಾರ್ (ಒಬಿಸಿ), ಡಾ.ಸಿ.ಎನ್. ಅಶ್ವತ್ಥ್ ನಾರಾಯಣ (ಒಕ್ಕಲಿಗ), ಆರ್.ಅಶೋಕ (ಒಕ್ಕಲಿಗ), ಅರವಿಂದ್ ಬೆಲ್ಲದ್ (ಲಿಂಗಾಯತ) ಅವರನ್ನೂ ವಿಪಕ್ಷ ನಾಯಕನ ಸ್ಥಾನಕ್ಕೆ ಪರಿಗಣಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಕಾರಣವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಯತ್ನಾಳ್ ಅವರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೇರುವುದಕ್ಕೆ ಬಿಎಸ್‌ವೈ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

SCROLL FOR NEXT