ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆದಯೇ ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಲೋಕಸಭಾ ಚುನಾವಣೆಗಾಗಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ
ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದ ಕೆಲವು ಶಾಸಕರು ಮತ್ತೆ ಮಾತೃಪಕ್ಷ ಸೇರಲು ಮುಂದಾಗಿರುವ ಬೆನ್ನಲ್ಲೆ, ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಆರಂಭಿಸಿರುವ ‘ಆಪರೇಷನ್ ಹಸ್ತ’ದ ಮಧ್ಯೆಯೇ ಕಟ್ಟಾ ಅವರು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಭೇಟಿ ಸಹಜವಾಗಿ ‘ಆಪರೇಷನ್ ಹಸ್ತ’ದ ಲೇಪ ಪಡೆದಿದೆ. ಅಧಿಕೃತವಾಗಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕಾಂಗ್ರೆಸ್ ಸೇರುವುದಾಗಿ ಎಲ್ಲೂ ಹೇಳಿಕೊಂಡಿಲ್ಲ.
ಮತ್ತೊಂದೆಡೆ, ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಮತ್ತೆ ಟಿಕೆಟ್ ಸಿಗದ ಕಾರಣಕ್ಕೆ ಬಿಎಸ್ಪಿ ಸೇರಿ ಕಣಕ್ಕಿಳಿದಿದ್ದ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಶ್ರೀನಿವಾಸ್ ಮೂರ್ತಿ ಇದೀಗ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: 'ಆಪರೇಷನ್ ಹಸ್ತ'ಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸ್ತು! 'ಕೈ'ಹಿಡಿಯಲು ಬಿಜೆಪಿ ಬೆಂಬಲಿಗರು, ನಾಯಕರು ಹಿಂಡು ಹಿಂಡಾಗಿ ಮುಂದು!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಹಾಲಿ ಸಂಸದ ಎಸ್. ಮುನಿಸ್ವಾಮಿಗೆ ಅವರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗುತ್ತಿದ್ದು, ಆ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿಯುಲು ಅಖಂಡ ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.