ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವವು ತನ್ನ ಶಾಸಕರು ಮತ್ತು ಮುಖಂಡರನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳಲು ಶತ ಪ್ರಯತ್ನಗಳನ್ನು ಮಾಡುತ್ತಿದ್ದರೂ ಬಿಜೆಪಿ ಮುಖಂಡರು ಮಾತ್ರ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುವುದನ್ನು ನಿಲ್ಲಿಸಿಲ್ಲ. ಯಲ್ಲಾಪುರದ ಶಾಸಕ, ಮಾಜಿ ಸಚಿವ ಶಿವರಾಮ ಹೆಬ್ಬಾರ್ ಮತ್ತು ಎಂಪಿ ರೇಣುಕಾಚಾರ್ಯ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡಲು ಕಾಂಗ್ರೆಸ್ ಆಪರೇಷನ್ ಹಸ್ತದಲ್ಲಿ ತೊಡಗಿದೆ ಎಂಬ ಗುಸುಗುಸು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿರುವಾಗಲೇ, ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಲೇ ಇದ್ದಾರೆ.
ಬಿಜೆಪಿ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಹೆಬ್ಬಾರ್, ಶುಕ್ರವಾರ ಸಂಜೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಮಾಜಿ ಸಚಿವ, ಯಶವಂತಪುರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಸೇರ್ತಾರೆ ಎಂಬ ವದಂತಿ ನಡುವೆ ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್!
ಈ ಮಧ್ಯೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ರೇಣುಕಾಚಾರ್ಯ ಕೂಡ ಶುಕ್ರವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಶನಿವಾರ ಮಾತನಾಡಿದ ರೇಣುಕಾಚಾರ್ಯ ಅವರು, ರಾಜ್ಯ ಬಿಜೆಪಿಯನ್ನು ಚುಕ್ಕಾಣಿ ಇಲ್ಲದ ಹಡಗು ಎಂದು ಕರೆದರು. ಏಕೆಂದರೆ, ವರಿಷ್ಠರು ಇನ್ನೂ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರನ್ನು ನೇಮಿಸಿಲ್ಲ.
ಈಮಧ್ಯೆ, ಮಾಜಿ ಸಿಎಂ ಮತ್ತು ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಲು ಮನವೊಲಿಸುವ ಪ್ರಯತ್ನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿ ಹರಡಿವೆ. ಆದರೆ, ಯಾವುದೇ ಕರೆ ಬಂದಿಲ್ಲ ಎಂದು ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ: ಶಿವರಾಮ್ ಹೆಬ್ಬಾರ್
ಪಕ್ಷ ತೊರೆದವರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ಹಿರಿಯ ಮುಖಂಡ ಸಿಟಿ ರವಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. 'ತಮ್ಮ ಅಧ್ಯಕ್ಷರು ಸೂಚಿಸಿದಂತೆ, ಮುಖಂಡರು ಕಾಂಗ್ರೆಸ್ ಸೇರಿದರೆ ಅವರು ಕೊನೆಯ ಬೆಂಚ್ನಲ್ಲಿ ಕುಳಿತುಕೊಳ್ಳಬೇಕಾಗುತ್ತದೆ' ಎಂದು ಅವರು ವ್ಯಂಗ್ಯವಾಡಿದರು.