ರಾಜಕೀಯ

ಕಾಂಗ್ರೆಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ; ಹಬ್ಬ, ಹರಿದಿನಗಳನ್ನು ಬದಿಗಿಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ: ವಿಜಯೇಂದ್ರ

Shilpa D

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ, ಮೋದಿ ಪರವಾದ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ. ಅಪಾರ ಜನಪ್ರಿಯತೆಯೂ ಅವರಿಗೆ ಇದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಲಘುವಾರಿ ಪರಿಗಣಿಸಬೇಡಿ ಎಂದು ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಪ್ರಥಮ ಸಭೆಯಲ್ಲಿ ಅವರು ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು ಮತ್ತು ವಿರೋಧ ಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

ಸ್ವಾತಂತ್ರ್ಯ ಬಂದ ಬಳಿಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಬಿಜೆಪಿಯ ಕೇಂದ್ರ ಸರಕಾರ ತಲುಪಿಸಿದೆ. ಇತರ ಯಾವ ಸರ್ಕಾರಗಳೂ ಇಂಥ ಕೆಲಸ ಮಾಡಿರಲಿಲ್ಲ. ರಾಜ್ಯದ ಕಾರ್ಯಕರ್ತರ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ.

ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಅಡಿ ಇಡಬೇಕು ಎಂದು ಸೂಚಿಸಿದರು.

ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ನಮಗೆಲ್ಲರಿಗೂ ರಾಜ್ಯ ಪದಾಧಿಕಾರಿಗಳಾಗಿ ಕೆಲಸ ಮಾಡುವ ಜವಾಬ್ದಾರಿ ಲಭಿಸಿದೆ. ನಾವೆಲ್ಲರೂ ಹೊಣೆಯರಿತು ಕರ್ತವ್ಯ ನಿರ್ವಹಿಸಬೇಕು. ನಮಗೆ ಹೊಣೆಗಾರಿಕೆ ಯಾವ ಕಾಲಘಟ್ಟದಲ್ಲಿ ಲಭಿಸಿದೆ ಎಂಬುದು ಅತ್ಯಂತ ಪ್ರಮುಖವಾದುದು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ನಮ್ಮ ಎದುರಿಗಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು. ಅದಕ್ಕಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ ಎಂದು ಅವರು ತಿಳಿಸಿದರು.

ಕರ್ನಾಟಕವು ಕೇವಲ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ, ಅದೊಂದು ಸುಭದ್ರ ಕೋಟೆಯಾಗಿದೆ ಎಂಬ ಸಂದೇಶವನ್ನು ನಾವು ನೀಡಬೇಕಿದೆ. ಕೇಂದ್ರದಲ್ಲಿ ಎರಡು ಬಾರಿ ಕಾಂಗ್ರೆಸ್ಸೇತರ ಪಕ್ಷವಾಗಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಆಗುವ ಎರಡನೇ ಮಹತ್ತರ ಕಾಲಘಟ್ಟದಲ್ಲೇ ಈ ಹೊಣೆ ನಮ್ಮೆಲ್ಲರ ಹೆಗಲಿಗೇರಿದೆ ಎಂದರು.

ಮುಂದಿನ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ನಮಗೆ ಭಾನುವಾರ, ಹಬ್ಬ, ಹರಿದಿನ ಎಂಬುದಿರಬಾರದು. ಕುಟುಂಬ ಎಲ್ಲವನ್ನೂ ಬದಿಗಿಡಿ. ಲೋಕಸಭಾ ಚುನಾವಣೆಯ ಗುರಿ ಮುಟ್ಟುವತನಕ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು. ನರೇಂದ್ರ ಮೋದಿಜೀ ಅವರು ವಿಶ್ರಾಂತಿ ಪಡೆಯದೆ ಕಳೆದ ಒಂಬತ್ತೂವರೆ ವರ್ಷಗಳಿಂದ ನಿರಂತರವಾಗಿ ದೇಶಸೇವೆ ಮಾಡುತ್ತಿದ್ದಾರೋ ಅದೇ ಮಾದರಿಯಲ್ಲಿ ಒಗ್ಗಟ್ಟಾಗಿ ಒಂದಾಗಿ ಕೆಲಸ ಮಾಡಬೇಕು. ಜಾತಿರಹಿತವಾಗಿ ಬಿಜೆಪಿ, ಹಿಂದುತ್ವದ ಜಾತಿಯಡಿ ಒಂದು ತಂಡವಾಗಿ ಕೆಲಸ ಮಾಡೋಣ ಎಂದು ವಿಜಯೇಂದ್ರ ಕರೆ ನೀಡಿದ್ದಾರೆ.

SCROLL FOR NEXT