ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಿ.ಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮನವಿ ಮಾಡಲು ಅಮಿತ್ ಶಾ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ.
ಪ್ರಕರಣವನ್ನ ಸಿಬಿಐಗೆ ನೀಡುವಂತೆ ರಮೇಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ಕೊಟ್ಟಿದ್ದಾರಂತೆ. ಇದರ ನಡುವೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗುತ್ತಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ಕೇಳಿದ್ದಾರಂತೆ.
ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ ಬೀಳಲಿದೆ ಎಂದು ಅಮಿತ್ ಶಾ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಇದ್ದ ರಮೇಶ ಜಾರಕಿಹೊಳಿ ಗುರುವಾರ ಮಧ್ಯಾಹ್ನ ದಿಢೀರ್ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ರಮೇಶ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಜತೆಗೆ ಕೆಲವು ಹಿರಿಯ ವರಿಷ್ಠರೊಂದಿಗೂ ಮಾತುಕತೆ ನಡೆಸಿದ್ದಾರೆ. ರಮೇಶ ಹಾಗೂ ಶಾ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.