ರಾಜಕೀಯ

ವೈ ಎಸ್ ವಿ ದತ್ತ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್​​: ಪಕ್ಷ ತೊರೆಯುವ ವಿಚಾರ ದೇವೇಗೌಡರಿಗೆ ಹೇಳಲು ಮುಜುಗರ; ನನ್ನದು ಅವರದ್ದು ತಂದೆ- ಮಗನ ಸಂಬಂಧ!

Shilpa D

ಕಡೂರು: ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ' ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ  ಘೋಷಿಸಿದ್ದಾರೆ.

ಕಡೂರು ತಾಲೂಕಿನ ಸ್ವಗ್ರಾಮ ಯುಗಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ.

ನನ್ನನ್ನ ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವಾಗಿದೆ. ಇದೀಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ. ಇದನ್ನ ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಆಗಿದೆ ಎಂದು ಹೇಳುವ ಮೂಲಕ ಭಾವುಕರಾದರು.

ಕಡೂರಿನಲ್ಲಿ ನಿರಂತರ ಜನರ ಸಂಪರ್ಕದಲ್ಲಿದ್ದೇನೆ. ಕಳೆದ ಒಂದೂವರೆ ವರ್ಷದಿಂದಲೂ ತಾಲೂಕಿನಲ್ಲಿ ಎಲ್ಲೇ ಹೋದರೂ ಕಾಂಗ್ರೆಸ್ ಸೇರಬೇಕೆಂಬ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಹಾಗಾಗಿ, ಜನಾಭಿಪ್ರಾಯ, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನನ್ನ ಸಮಾನ ಮನಸ್ಕ ಸ್ನೇಹಿತರಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಿದ್ದೇನೆ ಎಂದರು.

SCROLL FOR NEXT