ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಹೆಸರಾಗಿದ್ದ ಕಡೂರಿನ ಮಾಜಿ ಶಾಸಕ ವೈ ಎಸ್ವಿ ದತ್ತಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದತ್ತಾ ಅವರು ಜೆಡಿಎಸ್ ಜೊತೆಗಿನ ಧೀರ್ಘಕಾಲದ ಸಂಬಂಧ ತೊರೆದು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಪಕ್ಷದ ಬಾವುಟ ನೀಡುವ ಮೂಲಕ ದತ್ತಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದನ್ನೂ ಓದಿ: ಜೆಡಿಎಸ್ ಜಾತ್ಯಾತೀತ ನಿಲುವು ಶಿಥಿಲ: ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ
ನಂತರ ಮಾತನಾಡಿದ ಡಿಕೆ ಶಿವಕುಮಾರ್, ಮಕರ ಸಂಕ್ರಮಣದ ಪವಿತ್ರ ದಿನದಂದು ಇಬ್ಬರು ನಾಯಕರಾದ ವೈಎಸ್ವಿ ದತ್ತಾ, ಮಾಜಿ ಸಚಿವರು ಹಾಲಿ ಶಾಸಕರು ಆದ ಎಚ್. ನಾಗೇಶ್ ಅವರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಇದು ಆರಂಭ ಅಷ್ಟೇ ಇನ್ನು ಮುಂದೆ ವಾರಕ್ಕೊಮ್ಮೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಇರಲಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ವೈಎಸ್ವಿ ದತ್ತಾ ಹಾಗೂ ಹೆಚ್ ನಾಗೇಶ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಅಭಿನಂದಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.