ರಾಜಕೀಯ

ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ?

Manjula VN

ಬೆಂಗಳೂರು: ರಾಜ್ಯ ನಾಯಕತ್ವ ಬಲಪಡಿಸಲು ಬಿಜೆಪಿ ಸರಣಿ ಸಭೆ ನಡೆಸುತ್ತಿದ್ದು, ಈ ನಡುವಲ್ಲೇ ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರು ನವದೆಹಲಿಯಿಂದ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನ ರಾಜ್ಯ ಘಟಕದ ನಾಯಕ ಮತ್ತು ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸಭೆಗಳಲ್ಲಿ ಪಕ್ಷದ ಅಧ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನೇಮಕ ಮಾಡಬೇಕೆಂಬ ಸಲಹೆಗಳು ಬರುತ್ತಿವೆ ಎಂದು ತಿಳಿದುಬಂದಿದೆ. ಇದರೊಂದಿಗೆ ಪಕ್ಷವು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತನ್ನು ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ.

ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ನಾಯರಿಲ್ಲದ ಸ್ಥಿತಿಯಲ್ಲಿದ್ದು, ವಿಧಾನಸಭೆಯಲ್ಲಿಯೂ ನಾಯಕರಿಲ್ಲದೆಯೇ ಸರ್ಕಾರವನ್ನು ಎದುರಿಸಿತ್ತು. ಇದೀಗ ಸಂತೋಷ್ ಅವರು ರಾಜ್ಯಕ್ಕೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

SCROLL FOR NEXT