ರಾಜಕೀಯ

ಸುರೇಶ್ ಹೇಳಿಕೆ ವೈರಾಗ್ಯದ್ದಲ್ಲ; ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ: ಡಿಕೆಶಿ ತಿರುಗೇಟು

Nagaraja AB

ಬೆಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್
ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು. 

ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು. 

ಸಂಪುಟ ಸಚಿವರ ದೆಹಲಿ ಪ್ರವಾಸ: ಸಚಿವ ಸಂಪುಟ ಸಚಿವರ ದೆಹಲಿ ಪ್ರವಾಸ ಕುರಿತು ಮಾತನಾಡಿದ ಡಿಸಿಎಂ, ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಸಂಸತ್ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲು ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಮ್ಮ ನಾಯಕರುಗಳು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನು ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ. ಅವರು ಒಂದು ದಿನಾಂಕ ನೀಡಿದ್ದು, ಇನ್ನು ಅಂತಿಮವಾಗಿಲ್ಲ. ಇಂದು ಅಂತಿಮ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು. 

ಪರಿಷತ್  ಚುನಾವಣೆ: ನಾಮಪತ್ರ ಸಲ್ಲಿಸಲು ನಾಳೆಯವರೆಗೂ ಕಾಲಾವಕಾಶವಿದೆ. ನಮ್ಮ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ಅವಕಾಶ ನೀಡಲಾಗುವುದು. ನಾಮಪತ್ರ ಸಲ್ಲಿಕೆ ಮಾಡುವಾಗ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಅಕ್ಕಿ ನಿರಾಕರಣೆ ಹಿಂದೆ ದೊಡ್ಡ ಷಡ್ಯಂತ್ರ:  ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮಾಹಿತಿ ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು. 

ನಾಳೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ: ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ. ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ತಾವು ಕೂಡಾ ಭಾಗವಹಿಸುವುದಾಗಿ ತಿಳಿಸಿದರು. 

SCROLL FOR NEXT