ಹಾಸನ: ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು ಜೆಡಿಎಸ್ ಹಾಗೂ ಪಕ್ಷದ ಮುಖಂಡರನ್ನು ಶ್ಲಾಘಿಸಿರುವ ಆಡಿಯೊ ಹಾಗೂ ಕ್ಷೇತ್ರದ ವಿವಿಧ ಸಮುದಾಯಗಳ ಜನರ ವಿರುದ್ಧ ಮಾಡಿರುವ ಹೇಳಿಕೆಗಳ ಆಡಿಯೋ ನನ್ನ ಬಳಿ ಇದೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಂ ಶಿವಲಿಂಗೇಗೌಡ ಕೂಡ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಮುಂದೆ ಪ್ರಮಾಣ ವಚನ ಸ್ವೀಕರಿಸಿದ್ದು ತಾವು ಯಾವುದೇ ಸಂದರ್ಭದಲ್ಲೂ ಪಕ್ಷ ಬಿಡುವುದಿಲ್ಲ, ಜೆಡಿಎಸ್ನಲ್ಲಿ ಮುಂದುವರಿಯಲು ಸಾಧ್ಯವಾಗದಿದ್ದರೆ ಮಾತ್ರ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದರು.
ಕೆ.ಎಂ.ಶಿವಲಿಂಗೇಗೌಡ ಅವರ ಹೇಳಿಕೆಗಳನ್ನು ಅರಿತುಕೊಳ್ಳಬೇಕು. ಅರಸೀಕೆರೆ ಕ್ಷೇತ್ರದಲ್ಲಿ ಕೆ.ಎಂ ಶಿವಲಿಂಗೇಗೌಡ ಜೆಡಿಎಸ್ನಿಂದ ಮೂರು ಬಾರಿ ಗೆದ್ದಿದ್ದಾರೆ. ಆದರೆ ದುರದೃಷ್ಟವಶಾತ್ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ ನಂತರ ಜೆಡಿಎಸ್ ಮುಖಂಡರು ಮತ್ತು ಮತದಾರರನ್ನು ಗುರಿಯಾಗಿಸಲು ಪ್ರಾರಂಭಿಸಿದರು ಎಂದು ಎಚ್ ಡಿ ರೇವಣ್ಣ ಆರೋಪಿಸಿದರು.
ಕಾಂಗ್ರೆಸ್-ಜೆಡಿಎಸ್ ಮತ್ತು ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರಗಳ ಪ್ರಯತ್ನದಿಂದ ಅಗತ್ಯವಿರುವ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಹೊರತು ಶಿವಲಿಂಗೇಗೌಡರಿಂದಲ್ಲ. ಕ್ಷೇತ್ರದ ಅಭಿವೃದ್ಧಿಗೆ ಜೆಡಿಎಸ್ ನಾಯಕರ ಬೆಂಬಲವನ್ನು ಮರೆಯಬಾರದು ಎಂದರು. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಾದೇಶಿಕ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಎಚ್.ಡಿ.ರೇವಣ್ಣ ಟೀಕಿಸಿದರು.