ರಾಜಕೀಯ

ಬಿಜೆಪಿಯಲ್ಲಿ ಅಸಮಾಧಾನದ ಜ್ವಾಲಾಮುಖಿ ಸ್ಫೋಟ: ಜಾರಕಿಹೊಳಿ ಗೋಕಾಕ್ ಕ್ಷೇತ್ರವನ್ನ ಕುಮಟಳ್ಳಿಗೆ ಬಿಟ್ಟುಕೊಡ್ಲಿ- ಸವದಿ ಪುತ್ರ

Shilpa D

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ. ಈ ಬಗ್ಗೆ ಯಾವುದೇ ಎರಡನೇ ಆಲೋಚನೆ ಇಲ್ಲ ಎಂದು ಬಿಜೆಪಿ ಮುಖಂಡ ಮತ್ತು ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ಹೇಳಿದ್ದಾರೆ.

ಅಥಣಿ ಕ್ಷೇತ್ರದ ಮುಂದಿನ ಬಿಜೆಪಿ ಅಭ್ಯರ್ಥಿ ಶಾಸಕ ಮಹೇಶ ಕುಮಟಳ್ಳಿ ಎಂದು ಬಿಜೆಪಿಯ ಮಾಜಿ ಸಚಿವ ರಮೇಶ ಜಾರಕಿಹೊಳಿ ಇತ್ತೀಚೆಗೆ ಹೇಳಿಕೆ ನೀಡಿ ಮತದಾರರಲ್ಲಿ ಗೊಂದಲ ಮೂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಚಿದಾನಂದ ಸವದಿ, ತಮ್ಮ ತಂದೆ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಹಳ ಆಸಕ್ತಿ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದರು. 

ಜಾರಕಿಹೊಳಿ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಕುಮಟಳ್ಳಿ ಅವರನ್ನು ಅಥಣಿಯಲ್ಲಿ ಕಣಕ್ಕಿಳಿಸುವ ಬದಲು ಕುಮಟಳ್ಳಿಗೆ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಸಲು ಸಹಾಯ ಮಾಡಲಿ ಎಂದರು.

ನನ್ನ ತಂದೆ 2004 ರಿಂದ ಬಿಜೆಪಿಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಪಕ್ಷದ ಬಗ್ಗೆ ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದಾರೆ ಎಂದು ಚಿದಾನಂದ್ ಹೇಳಿದರು. 

ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕೆಂಬುದರ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ, ಅದು ಯಾರ ಪರವಾಗಿಯೂ ಇರಬಹುದು, ಹೈಕಮಾಂಡ್ ನಿರ್ಧಾರವನ್ನು ಗೌರವಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

SCROLL FOR NEXT