ರಾಜಕೀಯ

ಸರ್ವಶಕ್ತ ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಮಾತನಾಡಲು ಮುಜುಗರ ಯಾಕೆ?: ಸಿದ್ದರಾಮಯ್ಯ

Lingaraj Badiger

ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರ್ವಶಕ್ತ ಪ್ರಧಾನಿ ಮೋದಿಗೆ ಅದಾನಿ ಬಗ್ಗೆ ಮಾತನಾಡಲು ಮುಜುಗರ ಯಾಕೆ? ಎಂದು ಶನಿವಾರ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ವಶಕ್ತ ಪ್ರಧಾನ ಮಂತ್ರಿ ಎಂದು ಬೆಂಬಲಿಗರಿಂದ ಬಹುಪರಾಕ್ ಹಾಕಿಸಿಕೊಳ್ಳುತ್ತಿರುವ ಸನ್ಮಾನ್ಯ ನರೇಂದ್ರ ಮೋದಿ ಅವರೇ, ಗೌತಮ್ ಅದಾನಿ ಎಂಬ ಉದ್ಯಮಿ ಬಗ್ಗೆ ಮಾತನಾಡಲು ನಿಮಗೆ ಮುಜುಗರ ಯಾಕೆ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಉತ್ತರಿಸಲು ಭಯ ಯಾಕೆ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್‌ಐಸಿ ಮತ್ತಿತರ ಸಾರ್ವಜನಿಕ ಕ್ಷೇತ್ರದ ಹಣಕಾಸು ಸಂಸ್ಥೆಗಳು ಗೌತಮ್ ಅದಾನಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದೆಷ್ಟು? ಯಾರ ಸಲಹೆ ಮತ್ತು ಭರವಸೆಯಿಂದ ಜನರ ದುಡ್ಡನ್ನು ಈ ಸಂಸ್ಥೆಗಳು ಅದಾನಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದವು?

ಇಲ್ಲಿಯವರೆಗೆ ಗೌತಮ್ ಅದಾನಿಯವರು ಖರೀದಿಸಿರುವ ಬಿಜೆಪಿ ಪಕ್ಷದ ಚುನಾವಣಾ ಬಾಂಡ್ ಗಳ ಒಟ್ಟು ಮೌಲ್ಯ ಎಷ್ಟು? ಇದನ್ನು ಹೊರತುಪಡಿಸಿ ಪಕ್ಷಕ್ಕೆ ಅವರು ಅಧಿಕೃತವಾಗಿ ಕೊಟ್ಟಿರುವ ದೇಣಿಗೆ ಎಷ್ಟು? 

ನೀವು ಭೇಟಿ ನೀಡಿದ ದೇಶಗಳಲ್ಲಿ ಅದಾನಿಯವರು ಯಾವ ಉದ್ಯಮಗಳನ್ನು ಸ್ಥಾಪಿಸಿದರು? ಯಾವ ಗುತ್ತಿಗೆ ಪಡೆದರು? ಶ್ರೀಲಂಕಾ, ಇಸ್ರೇಲ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಗೌತಮ್ ಅದಾನಿಯವರ ಉದ್ಯಮ ಸ್ಥಾಪನೆಗೂ ಆ ದೇಶಗಳಿಗೆ ನಿಮ್ಮ ಭೇಟಿಗೂ ಏನಾದರೂ ಸಂಬಂಧ ಇದೆಯೇ? ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

SCROLL FOR NEXT